ಶ್ರೀನಗರ: ಕಾಂಗ್ರೆಸ್ ನಾಯಕ, ಮಾಜಿ ಶಾಸಕ ಅಶೋಕ್ ಶರ್ಮಾ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿರುವ ಶರ್ಮಾ, ಸದ್ಯದ ಪರಿಸ್ಥಿತಿ ಮತ್ತು ಅನಿವಾರ್ಯ ಕಾರಣಗಳಿಂದ ರಾಜೀನಾಮೆ ನೀಡುತ್ತಿರುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಶರ್ಮಾ ಅವರು ಎಐಸಿಸಿಯ ‘ವಿಚಾರ್ ವಿಭಾಗ್’ನ ರಾಷ್ಟ್ರೀಯ ಸಂಚಾಲಕ ಮತ್ತು ಪ್ರದೇಶ ಕಾರ್ಯಕಾರಿ ಸಮಿತಿಯ ಸದಸ್ಯರೂ ಆಗಿ ಕಾರ್ಯನಿರ್ವಹಿಸಿದ್ದಾರೆ.
ಗುಲಾಂ ನಬಿ ಆಜಾದ್ ಅವರನ್ನು ಬೆಂಬಲಿಸಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಉಪ ಮುಖ್ಯಮಂತ್ರಿ ತಾರಾ ಚಂದ್ ಸೇರಿದಂತೆ 50 ಕ್ಕೂ ಹೆಚ್ಚು ಹಿರಿಯ ಕಾಂಗ್ರೆಸ್ ನಾಯಕರು ಇತ್ತೀಚೆಗೆ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ, ಅಶೋಕ್ ಶರ್ಮಾ ಸಹ ರಾಜೀನಾಮೆ ನೀಡಿದ್ದಾರೆ.
‘ನಾನು ಹೃತ್ಪೂರ್ವಕವಾಗಿ ಕಾಂಗ್ರೆಸ್ ಪಕ್ಷವನ್ನು ಪ್ರೀತಿಸುತ್ತಿದ್ದೆ. ಸಣ್ಣ ಪ್ರಾದೇಶಿಕ ಘಟಕಗಳಿಂದ ತೊಡಗಿ ಅನೇಕ ರಾಜ್ಯಗಳಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲು ಪ್ರಯತ್ನಿಸಿದ್ದೆ’ ಎಂದು ಶರ್ಮಾ ಹೇಳಿದ್ದಾರೆ.