ಲಖನೌ: ಕೇಂದ್ರ ಸರ್ಕಾರದ ವಿವಾದಿತ ಮೂರು ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಉತ್ತರ ಪ್ರದೇಶದ ಮುಜಾಫರ್ನಗರ ಜಿಲ್ಲೆಯಲ್ಲಿ ಭಾನುವಾರ 'ರೈತರ ಮಹಾ ಪಂಚಾಯತ್' ಆಯೋಜಿಸಿವೆ.
ರೈತ ಸಂಘಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಆಯೋಜಿಸಿದ ಮಹಾ ಪಂಚಾಯತ್ನಲ್ಲಿ ವಿವಿಧ ರಾಜ್ಯಗಳಿಂದ ಭಾರಿ ಸಂಖ್ಯೆಯಲ್ಲಿ ರೈತರು ಭಾಗವಹಿಸಿದ್ದರು.
ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವುದರಿಂದ ರೈತರ ಸಮಾವೇಶವು ಹೆಚ್ಚಿನ ಮಹತ್ವವನ್ನು ಗಿಟ್ಟಿಸಿದೆ.
'ಉತ್ತರ ಪ್ರದೇಶ, ಹರಿಯಾಣ, ಪಂಜಾಬ್, ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ 300ಕ್ಕೂ ಹೆಚ್ಚು ರೈತ ಸಂಘಗಳ ಕಾರ್ಯಕರ್ತರು ಕಿಸಾನ್ ಮಹಾ ಪಂಚಾಯತ್ನಲ್ಲಿ ಭಾಗವಹಿಸಿದ್ದಾರೆ' ಎಂದು ಭಾರತೀಯ ಕಿಸಾನ್ ಒಕ್ಕೂಟದ ಮಾಧ್ಯಮ ಉಸ್ತುವಾರಿ ಧರ್ಮೇಂದ್ರ ಮಲಿಕ್ ಹೇಳಿದ್ದಾರೆ.
5,000ಕ್ಕೂ ಹೆಚ್ಚು ಫುಡ್ ಸ್ಟಾಲ್, ಮೊಬೈಲ್ ಸ್ಟಾಲ್ ಹಾಗೂ 100ಕ್ಕೂ ಹೆಚ್ಚು ವೈದ್ಯಕೀಯ ಕ್ಯಾಂಪ್ಗಳನ್ನು ಸ್ಥಾಪಿಸಲಾಗಿತ್ತು. ವಿವಿಧ ರೈತ ಸಂಘಗಳಿಗೆ ಸೇರಿದ ಮಹಿಳೆಯರೂ ಭಾಗವಹಿಸಿದ್ದರು.
ಪಂಜಾಬ್ನ ಒಟ್ಟು 32 ರೈತ ಸಂಘಗಳು ರೈತರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರಕ್ಕೆ ಸೆಪ್ಟೆಂಬರ್ 8ರ ಗಡುವನ್ನು ನೀಡಿದೆ. ಪ್ರಕರಣಗಳನ್ನು ಹಿಂಪಡೆಯದಿದ್ದಲ್ಲಿ ದೊಡ್ಡ ಮಟ್ಟದ ಪ್ರತಿಭಟನೆಯನ್ನು ನಡೆಸಲು ಮಾರ್ಗಸೂಚಿ ರಚಿಸುವುದಾಗಿ ಎಚ್ಚರಿಸಿದೆ.
ವಿವಾದಿತ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ದೆಹಲಿ ಗಡಿ ಪ್ರದೇಶಗಳಲ್ಲಿ ಕಳೆದ ಒಂಬತ್ತು ತಿಂಗಳಿಗಿಂತಲೂ ಹೆಚ್ಚು ಸಮಯದಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.