ಮುಂಬೈ: ಶಿವಸೇನಾ ಸಂಸದ ಸಂಜಯ ರಾವುತ್ ನ್ಯಾಯಾಂಗ ಬಂಧನದ ಅವಧಿಯನ್ನು ಇಲ್ಲಿನ ವಿಶೇಷ ನ್ಯಾಯಾಲಯ ಸೆಪ್ಟೆಂಬರ್ 5ರವರೆಗೆ ವಿಸ್ತರಿಸಿ ಸೋಮವಾರ ಆದೇಶ ನೀಡಿದೆ.
ಪತ್ರಾ ಚಾಳ್ ಭೂಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾವುತ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಆಗಸ್ಟ್ 1ರಂದು ವಶಕ್ಕೆ ಪಡೆದು ಬಳಿಕ ಬಂಧಿಸಿದ್ದರು.
ಆಗಸ್ಟ್ 8ರಂದು ನ್ಯಾಯಾಲಯವು ರಾವುತ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿತ್ತು.
ಸೋಮವಾರ ರಾವುತ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಎಂ.ಜಿ. ದೇಶಪಾಂಡೆ, ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ಆದೇಶ ನೀಡಿದರು.
ರಾವುತ್ ವಿರುದ್ಧದ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ ಎಂದು ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ತಿಳಿಸಿದೆ.