ಮುಂಬೈ: ಪೊಲೀಸರ ವರ್ಗಾವಣೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಗೌಪ್ಯ ಪತ್ರವನ್ನು ಐಪಿಎಸ್ ಅಧಿಕಾರಿ ರಶ್ಮಿ ಶುಕ್ಲಾ ಅವರೇ ಸೋರಿಕೆ ಮಾಡಿರುವ ಸಾಧ್ಯತೆ ಇದೆ ಎಂದು ಮಹಾರಾಷ್ಟ್ರ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೀತಾರಾಂ ಕುಂಟೆ ಅವರು ಸಲ್ಲಿಸಿರುವ ಸತ್ಯಶೋಧನಾ ವರದಿಯಲ್ಲಿ ಹೇಳಲಾಗಿದೆ.
‘ಪೊಲೀಸರ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಶುಕ್ಲಾ ಅವರು ಸಲ್ಲಿಸಿರುವ ವರದಿಯನ್ನು ರಾಜ್ಯ ಸರ್ಕಾರವೇ ಮುಚ್ಚಿಟ್ಟಿದೆ’ ಎಂದು ಬಿಜೆಪಿ ಮುಖಂಡ ದೇವೇಂದ್ರ ಫಡಣವೀಸ್ ಇತ್ತೀಚೆಗೆ ಆರೋಪಿಸಿದ್ದರು.
ಈ ಸಂಬಂಧ ವರದಿ ಸಲ್ಲಿಸುವಂತೆ ಕುಂಟೆ ಅವರಿಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೂಚನೆ ನೀಡಿದ್ದರು. ಇತ್ತೀಚಿನ ವರ್ಷಗಳಲ್ಲಿಯೇ ಪೊಲೀಸ್ ಇಲಾಖೆಯಲ್ಲಿ ಭಾರಿ ವರ್ಗಾವಣೆ ಮಾಡಲಾಗಿದ್ದು, ಇದು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.