ಚೆನ್ನೈ: ತಮಿಳುನಾಡಿನ ಕಲ್ಲಕುರಿಚಿಯ ಚಿನ್ನಸೇಲಂನಲ್ಲಿರುವ ಖಾಸಗಿ ವಸತಿ ಶಾಲೆಯೊಂದರ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಬಳಿಕ ನಡೆದಿರುವ ಹಿಂಸಾಚಾರದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಎಟಿ) ರಚಿಸಲಾಗಿದೆ ಎಂದು ತಮಿಳುನಾಡಿನ ಡಿಜಿಪಿ ಸಿ. ಶೈಲೇಂದ್ರ ಬಾಬು ಮಂಗಳವಾರ ತಿಳಿಸಿದ್ದಾರೆ.
ಸೇಲಂ ವಲಯದ ಡಿಐಜಿ ಪ್ರವೀಣ್ ಕುಮಾರ್ ಅಭಿನಪು ಅವರ ನೇತೃತ್ವದಲ್ಲಿ ಎಸ್ಐಟಿ ತನಿಖೆ ನಡೆಯಲಿದೆ. ಅವರ ಜೊತೆಗೆ ಪೊಲೀಸ್ ಇಲಾಖೆಯ ಉನ್ನತ ಸ್ಥಾನದಲ್ಲಿರುವ ಐವರು ಎಸ್ಐಟಿಯಲ್ಲಿದ್ದಾರೆ.
ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದವರು ಮತ್ತು ಅದರಲ್ಲಿ ಭಾಗಿಯಾದವರ ಪತ್ತೆಗಾಗಿ ತನಿಖೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಘಟನೆಯ ಕುರಿತು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಮಂಗಳವಾರ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಮತ್ತು ಅಧಿಕಾರಿಗಳ ಜೊತೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ.
ಬಾಲಕಿಯ ಸಾವಿಗೆ ನ್ಯಾಯ ದೊರೆಯಬೇಕೆಂದು ಆಗ್ರಹಿಸಿ ಈಚೆಗೆ ನಡೆದಿದ್ದ ಪ್ರತಿಭಟನೆಯ ವೇಳೆ ಪ್ರತಿಭಟನಕಾರರು ಶಾಲೆಗೆ ಹಾನಿಯೆಸಗಿ, ಬಸ್ಗಳಿಗೆ ಬೆಂಕಿ ಹಚ್ಚಿದ್ದರು.