ಬಲರಾಮ್ಪುರ್: ಎಸ್ಯುವಿ ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮದುವೆಗೆ ತೆರಳುತ್ತಿದ್ದ 6 ಮಂದಿ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ತುಳಸಿಪುರ ಮತ್ತು ಬರ್ಹಾನಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತರು ಗಸಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಲಕ್ಷ್ಮಣಪುರದಿಂದ ಭಗವಾನ್ಪುರಕ್ಕೆ ಪ್ರಯಾಣಿಸುತ್ತಿದ್ದಾಗ ಶುಕ್ರವಾರ ತಡರಾತ್ರಿ ಗನ್ವಾರಿಯಾ ಬಳಿ ಅಪಘಾತ ಸಂಭವಿಸಿದೆ ಎಂದು ಬಲರಾಮಪುರದ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಕುಮಾರ್ ಸಕ್ಸೇನಾ ತಿಳಿಸಿದ್ದಾರೆ.
ಹಿಂಬದಿಯಲ್ಲಿ ಬರುತ್ತಿದ್ದ ಜೀಪ್ ಕೂಡ ಎಸ್ಯುವಿಗೆ ಡಿಕ್ಕಿ ಹೊಡೆದಿದೆ ಎಂದು ಎಸ್ಪಿ ಹೇಳಿದ್ದಾರೆ.
ಬಸಂತ್ (32), ಅವರ ಪತ್ನಿ ಅಮೃತಾ (28), ಲಕ್ಷ್ಮಣ್ (40), ವಾಡಿ (35) ಮತ್ತು ಶಾದಾಬ್ (26) ಸ್ಥಳದಲ್ಲೇ ಮೃತಪಟ್ಟರೆ, ಅಂಕಿತ್ (13) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಗಾಯಗೊಂಡಿರುವ ಶಿವಪ್ರಸಾದ್ (52) ಹಾಗೂ ದುರ್ಗಾಪ್ರಸಾದ್ (26) ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಉಮೇಶ್ (13) ಎಂಬ ಹೆಸರಿನ ಮತ್ತೊಬ್ಬ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಲಖನೌ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಮತ್ತು ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಎಸ್ಪಿ ತಿಳಿಸಿದ್ದಾರೆ.