ನವದೆಹಲಿ: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ (ಪಿಎಂಜಿಕೆಎವೈ) ಅಡಿಯಲ್ಲಿ ಆಹಾರ ಧಾನ್ಯ ದಾಸ್ತಾನು ಸಾಕಷ್ಟಿದೆ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ಧಾರೆ.
ದೆಹಲಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಳೆದ 28 ತಿಂಗಳಲ್ಲಿ ಸರ್ಕಾರವು ಪಿಎಂಜಿಕೆಎವೈ ಅಡಿಯಲ್ಲಿ ಬಡವರಿಗೆ ಉಚಿತ ಪಡಿತರ ವಿತರಣೆಗೆ ₹1.80 ಲಕ್ಷ ಕೋಟಿ ಖರ್ಚು ಮಾಡಿದೆ ಎಂದು ಹೇಳಿದರು.
ಆಹಾರ ಭದ್ರತಾ ಕಾನೂನು ಮತ್ತು ಇತರ ಕಲ್ಯಾಣ ಯೋಜನೆಗಳ ಅಡಿಯಲ್ಲಿ ಅವಶ್ಯಕತೆಗಳನ್ನು ಪೂರೈಸಲು ಸರ್ಕಾರವು ಸಾಕಷ್ಟು ಆಹಾರ ಧಾನ್ಯಗಳನ್ನು ಹೊಂದಿದೆ ಎಂದು ಅವರು ತಿಳಿಸಿದರು.
ಉತ್ತರ ಪ್ರದೇಶ, ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಬರ ಮತ್ತು ಹವಾಮಾನ ಬದಲಾವಣೆಯ ಪರಿಣಾಮವಾಗಿ ಅಕ್ಕಿ ಮತ್ತು ಗೋಧಿಯ ಉತ್ಪಾದನೆಯಲ್ಲಿ ಕುಸಿತವಾಗಿದೆ ಎಂಬ ತಪ್ಪು ಕಲ್ಪನೆ ಹರಡಿದ್ದರೂ ಸಹ ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಮತ್ತು ಪಿಎಂಜಿಕೆಎವೈಯಂತಹ ಕಲ್ಯಾಣ ಯೋಜನೆಗಳಿಗೆ ಆಹಾರ ಧಾನ್ಯಗಳ ಖರೀದಿಯು ಸುಗಮವಾಗಿ ನಡೆಯುತ್ತಿದೆ ಎಂದು ಸಚಿವೆ ಹೇಳಿದರು.
ಆಧುನಿಕ ತಂತ್ರಜ್ಞಾನ ಮೂಲಕ ಪಿಡಿಎಸ್ ವ್ಯವಸ್ಥೆಯನ್ನು ಸುಧಾರಿಸಲು ತೆಗೆದುಕೊಂಡ ಕ್ರಮಗಳ ಕುರಿತು ವಿವರಿಸಿದ ಅವರು, ಇದರಿಂದಾಗಿ ಸಾರ್ವಜನಿಕ ವಿತರಣಾ ವ್ಯವಸ್ಥೆಗಾಗಿ ಸಂಗ್ರಹಿಸಲಾಗುವ ಆಹಾರ ಧಾನ್ಯಗಳು ಹಾಳಾಗುವುದನ್ನು, ವ್ಯರ್ಥವಾಗುವುದನ್ನು ತಡೆಯಲು ಮತ್ತು ಸೋರಿಕೆಯನ್ನು ನಿಯಂತ್ರಿಸಲು ಸಾಧ್ಯವಾಗುವುದರ ಜೊತೆಗೆ ರೈತರಿಗೆ ಡಿ.ಬಿ.ಟಿ (ನೇರ ಲಾಭ ವರ್ಗಾವಣೆ) ವಿಧಾನದ ಮೂಲಕ ಸಂಗ್ರಹಿಸಿದ ಧಾನ್ಯಗಳಿಗೆ ಬೆಂಬಲ ಬೆಲೆಯನ್ನು ಪಾವತಿಸಲು ಸಾಧ್ಯವಾಗುತ್ತಿದೆ ಎಂದರು.
2023ರಲ್ಲಿ ಆಚರಿಸಲಾಗುವ ಅಂತರರಾಷ್ಟ್ರೀಯ ಸಿರಿ ಧಾನ್ಯ ವರ್ಷಕ್ಕೆ ಮುಂಚಿತವಾಗಿ ಸಿರಿ ಧಾನ್ಯಗಳ ಉತ್ಪಾದನೆ ಮತ್ತು ರಫ್ತಿಗೆ ಉತ್ತೇಜನ ನೀಡುವುದರತ್ತ ಕೂಡ ಗಮನವನ್ನು ನೀಡಲಾಗುತ್ತಿದೆ ಎಂದು ಕರಂದ್ಲಾಜೆ ಸುದ್ದಿಗಾರರಿಗೆ ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.