ನವದೆಹಲಿ: ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಕಾಂಪೌಂಡ್ ಕೆಡವಿದ್ದು ಹಾಗೂ ಭದ್ರತಾ ಸಿಬ್ಬಂದಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯ ವಿಧಿಸಿರುವ ಎರಡು ವರ್ಷದ ಜೈಲು ಶಿಕ್ಷೆಯನ್ನು ಪ್ರಶ್ನಿಸಿ ಆಪ್ ಶಾಸಕ ಸೋಮನಾಥ ಭಾರ್ತಿ ಅವರು ಬುಧವಾರ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಸೋಮನಾಥ ಭಾರ್ತಿ ಹೈಕೋರ್ಟ್ಗೆ ಸಲ್ಲಿಸಿದ ಅರ್ಜಿಯಲ್ಲಿ ‘ವಿಚಾರಣಾ ನ್ಯಾಯಾಲಯದ ತೀರ್ಪನ್ನು ಬದಿಗಿಟ್ಟು, ಎಲ್ಲ ಆರೋಪಗಳಿಂದ ನನ್ನನ್ನು ಮುಕ್ತಗೊಳಿಸಬೇಕು‘ ಎಂದು ಮನವಿ ಮಾಡಿದ್ದಾರೆ.
ಪ್ರಾಸಿಕ್ಯೂಷನ್ ಪ್ರಕಾರ, ಭಾರ್ತಿ ಮತ್ತು ಇತರೆ 300 ಮಂದಿ ಸೆಪ್ಟೆಂಬರ್ 9, 2016ರಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದ ಗೋಡೆಯನ್ನು ಜೆಸಿಬಿಯಿಂದ ಕೆಡವಿದ ಆರೋಪ ಎದುರಿಸುತ್ತಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ ತಿಂಗಳಲ್ಲಿ ನ್ಯಾಯಾಧೀಶರು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದರು. ಮಂಗಳವಾರ ಸೆಷನ್ಸ್ ನ್ಯಾಯಾಲಯ ಈ ತೀರ್ಪನ್ನು ಎತ್ತಿಹಿಡಿಯಿತು.