ಲಖನೌ: ಉತ್ತರ ಪ್ರದೇಶ ವಿಧಾನಸಭೆಗೆಮುಂದಿನ ವರ್ಷ ನಡೆಯಲಿರುವ ಚುನಾವಣೆಗಾಗಿ ಸಣ್ಣಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಮಾಜವಾದಿ ಪಕ್ಷದ ನಿರ್ಧಾರ ಆ ಪಕ್ಷದ ಅಸಹಾಯಕತೆಯನ್ನು ತೋರಿಸುತ್ತದೆ ಎಂದು ಬಿಎಸ್ಪಿ ನಾಯಕಿ ಮಾಯಾವತಿ ಶುಕ್ರವಾರ ಹೇಳಿದ್ದಾರೆ.
ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಯಾವ ಪ್ರಮುಖ ರಾಜಕೀಯ ಪಕ್ಷಗಳೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಇತ್ತೀಚೆಗೆ ಹೇಳಿದ್ದರು.
ಈ ಹಿಂದೆ ನಡೆದ ಚುನಾವಣೆಗಳಲ್ಲಿ ಪ್ರಮುಖ ರಾಜಕೀಯ ಪಕ್ಷಗಳು ಮೈತ್ರಿ ಸಾಧಿಸಿ, ಚುನಾವಣೆ ಎದುರಿಸಿದ್ದರೂ, ಯಾವ ಪಕ್ಷಕ್ಕೂ ನಿರೀಕ್ಷಿತ ಫಲಿತಾಂಶ ಸಿಕ್ಕಿರಲಿಲ್ಲ. ಈ ಕಹಿ ಅನುಭವದ ಕಾರಣದಿಂದಾಗಿ, ಪ್ರಮುಖ ಪಕ್ಷಗಳು ಮೈತ್ರಿ ಮಾಡಿಕೊಳ್ಳಲು ಹಿಂಜರಿಯುತ್ತಿವೆ ಎಂದು ವಿಶ್ಲೇಷಿಸಲಾಗುತ್ತಿದೆ.
‘ತನ್ನ ಸ್ವಾರ್ಥ ಹಾಗೂ ಸಂಕುಚಿತ ದೃಷ್ಟಿಕೋನದ ಫಲವಾಗಿ ಸಮಾಜವಾದಿ ಪಕ್ಷ ಈ ಹಿಂದಿನ ಚುನಾವಣೆಗಳಲ್ಲಿ ಸೋಲು ಕಂಡಿದೆ. ಅದರಲ್ಲೂ, ಪರಿಶಿಷ್ಟರ ವಿರೋಧಿ ನಿಲುವು, ಅದರ ಕಾರ್ಯವೈಖರಿಯಿಂದಾಗಿ ಇತರ ಪಕ್ಷಗಳು ಸಮಾಜವಾದಿ ಪಕ್ಷದ ಜೊತೆ ಮೈತ್ರಿಗೆ ಮುಂದಾಗುತ್ತಿಲ್ಲ’ ಎಂದು ಮಾಯಾವತಿ ಅವರು ಟ್ವೀಟ್ ಮಾಡಿದ್ದಾರೆ.