ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬಾಬರಿ’ ಧ್ವಂಸ: ಇಂದು ತೀರ್ಪು

Last Updated 29 ಸೆಪ್ಟೆಂಬರ್ 2020, 19:45 IST
ಅಕ್ಷರ ಗಾತ್ರ

ಲಖನೌ: ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪನ್ನು ಇಲ್ಲಿನ ವಿಶೇಷ ನ್ಯಾಯಾಲಯ ಬುಧವಾರ ಪ್ರಕಟಿಸಲಿದೆ.

ಪ್ರಕರಣದಲ್ಲಿಬಿಜೆಪಿಯ ಹಿರಿಯ ನಾಯಕರಾದ ಎಲ್‌.ಕೆ. ಅಡ್ವಾಣಿ, ಮುರಳಿ ಮನೋಹರ ಜೋಶಿ, ಉಮಾ ಭಾರತಿ, ಕಲ್ಯಾಣ್‌ ಸಿಂಗ್‌ ಮತ್ತಿತರರುಆರೋಪಿಗಳಾಗಿದ್ದಾರೆ. ತೀರ್ಪು ಪ್ರಕಟವಾಗುವ ದಿನದಂದು ಎಲ್ಲ 32 ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಿರಬೇಕು ಎಂದು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಸ್‌.ಕೆ. ಯಾದವ್‌ ಸೆ.16ರಂದು ನಿರ್ದೇಶಿಸಿದ್ದರು.

ಕೋವಿಡ್‌–19 ದೃಢಪಟ್ಟಿರುವ ಉಮಾ ಭಾರತಿ ಹಾಗೂ ಕಲ್ಯಾಣ್‌ ಸಿಂಗ್‌ ಆಸ್ಪತ್ರೆಗೆ ದಾಖಲಾಗಿದ್ದು, ತೀರ್ಪು ಪ್ರಕಟವಾಗುವ ಸಂದರ್ಭದಲ್ಲಿ ಅವರು ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆಯೇ ಎನ್ನುವುದು ಇನ್ನೂ ಖಚಿತವಾಗಿಲ್ಲ. ಸಿಂಗ್‌, ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬಾಬರಿ ಮಸೀದಿ ಧ್ವಂಸ ಘಟನೆ ನಡೆದಿತ್ತು. ರಾಜಸ್ಥಾನದ ರಾಜ್ಯಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರ ಅವಧಿ ಕಳೆದ ಸೆಪ್ಟೆಂಬರ್‌ನಲ್ಲಿ ಪೂರ್ಣಗೊಂಡಿತ್ತು. ಇದಾದ ಬಳಿಕ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ರಾಮ ಮಂದಿರ ನಿರ್ಮಾಣದ ಹೊಣೆ ಹೊತ್ತಿರುವ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್‌ ರೈ ಕೂಡಾ ಪ್ರಕರಣದ ಆರೋಪಿಯಾಗಿದ್ದಾರೆ.

ವಿಶೇಷ ನ್ಯಾಯಾಲಯದ ಮುಂದೆ 351 ಸಾಕ್ಷಿಗಳನ್ನು ಹಾಗೂ 600 ದಾಖಲೆಗಳನ್ನು ಸಿಬಿಐ ಸಲ್ಲಿಸಿದ್ದು, 48 ಜನರ ವಿರುದ್ಧ ಆರೋಪಪಟ್ಟಿ ದಾಖಲಿಸಲಾಗಿತ್ತು.ವಿಚಾರಣೆಯ ಸುದೀರ್ಘ ಅವಧಿಯಲ್ಲಿ ಆರೋಪಿಗಳ ಪೈಕಿ 17 ಜನರು ಮೃತಪಟ್ಟಿದ್ದಾರೆ.

‘ಆರೋಪಿಗಳು ಮಸೀದಿಯನ್ನು ಧ್ವಂಸಗೊಳಿಸಲು ಪಿತೂರಿ ನಡೆಸಿ ‘ಕರಸೇವಕ’ರಿಗೆ ಪ್ರಚೋದಿಸಿದ್ದರು’ ಎಂದು ಸಿಬಿಐ ವಾದ ಮಂಡಿಸಿತ್ತು. ಈ ಆರೋಪವನ್ನು ತಳ್ಳಿ ಹಾಕಿದ್ದ ಆರೋಪಿಗಳು, ತಮ್ಮ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಲು ಯಾವುದೇ ಸಾಕ್ಷ್ಯಗಳಿಲ್ಲ. ತಮ್ಮ ವಿರುದ್ಧದ ದೋಷಾರೋಪಣೆ ಅಂದು ಅಧಿಕಾರದಲ್ಲಿದ್ದ ಕಾಂಗ್ರೆಸ್‌ ಸರ್ಕಾರದ ರಾಜಕೀಯ ಒಳಸಂಚು ಎಂದು ಪ್ರತಿವಾದ ಮಂಡಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಲಖನೌ ಮತ್ತು ರಾಯಬರೇಲಿಯಲ್ಲಿ ಎರಡು ಪ್ರತ್ಯೇಕ ದೂರುಗಳು ದಾಖಲಾಗಿದ್ದವು. ಮೊದಲ ದೂರಿನಲ್ಲಿ ಕರಸೇವಕರ ವಿರುದ್ಧ ಹಾಗೂ ಮತ್ತೊಂದರಲ್ಲಿ ಅಡ್ವಾಣಿ, ಜೋಶಿ ಹೀಗೆ ಪ್ರಮುಖ ನಾಯಕರ ವಿರುದ್ಧ ದೂರು ದಾಖಲಾಗಿತ್ತು. ಈ ಎರಡೂ ದೂರುಗಳನ್ನು ಒಟ್ಟುಗೂಡಿಸಿ ವಿಚಾರಣೆ ನಡೆಸುವಂತೆ 2017ರಲ್ಲಿ ಸುಪ್ರೀಂ ಕೋರ್ಟ್‌ ಆದೇಶಿಸಿತ್ತು.ಬಿಜೆಪಿ ನಾಯಕರ ವಿರುದ್ಧದ ಆರೋಪ ಕೈಬಿಡುವಂತೆ 2010ರಲ್ಲಿ ಅಲಹಾಬಾದ್‌ ಹೈಕೋರ್ಟ್‌ ನೀಡಿದ್ದ ಆದೇಶವನ್ನೂ ಸುಪ್ರೀಂ ಕೋರ್ಟ್‌ ಅಂದು ರದ್ದುಪಡಿಸಿತ್ತು.

ಪ್ರಕರಣವೇನು?

ಅಯೋಧ್ಯೆಯಲ್ಲಿರಾಮ ಮಂದಿರವಿದ್ದ ನಿವೇಶನದಲ್ಲಿಬಾಬರಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಪ್ರತಿಪಾದಿಸಿದ್ದ ‘ಕರಸೇವಕರು’1992ರ ಡಿಸೆಂಬರ್‌ 6ರಂದು, ಮಸೀದಿಯನ್ನು ಧ್ವಂಸ ಮಾಡಿದ್ದರು.

ಪರ್ಯಾಯ ಭೂಮಿ: ಕಳೆದ ವರ್ಷ ಐತಿಹಾಸಿಕ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್‌, ಅಯೋಧ್ಯೆಯಲ್ಲಿನ ಈ ವಿವಾದಾತ್ಮಕ ನಿವೇಶನವನ್ನು ರಾಮ ಮಂದಿರ ನಿರ್ಮಾಣಕ್ಕೆ ಗೊತ್ತುಪಡಿಸಿತ್ತು. ಜೊತೆಗೆ ಮಸೀದಿ ಧ್ವಂಸವನ್ನು ಕಾನೂನು ಉಲ್ಲಂಘನೆ ಎಂದು ಹೇಳಿತ್ತು. ವಿವಾದಾತ್ಮಕ ನಿವೇಶನದ ಬದಲಾಗಿ, ಅಯೋಧ್ಯೆ ನಗರಲ್ಲೇ ಮಸೀದಿ ನಿರ್ಮಾಣಕ್ಕೆ ಐದು ಎಕರೆ ನಿವೇಶನ ನೀಡಬೇಕು ಎಂದು ಆದೇಶಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT