ನವದೆಹಲಿ: ದೇಶದಲ್ಲಿ ಕೋವಿಡ್–19ನ 3ನೇ ಅಲೆ ಕಾಣಿಸಿಕೊಳ್ಳುವ ಸಂಭವ ಇರುವುದರಿಂದ, ಪರಿಹಾರ ಕಾರ್ಯದಲ್ಲಿ ನೆರವಾಗಲು ಸ್ವಯಂ ಸೇವಕರಿಗೆ ತರಬೇತಿ ನೀಡಲು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್) ನಿರ್ಧರಿಸಿದೆ.
ಮಧ್ಯಪ್ರದೇಶದ ಚಿತ್ರಕೂಟದಲ್ಲಿ ನಡೆಯುತ್ತಿರುವ ಸಂಘಟನೆಯ ಅಖಿಲ ಭಾರತೀಯ ಪ್ರಾಂತ್ಯ ಪ್ರಚಾರಕರ ಸಮಾವೇಶದಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
‘ತರಬೇತಿಯನ್ನು ಪೂರ್ಣಗೊಳಿಸುವ ಸ್ವಯಂ ಸೇವಕರು ಅಗತ್ಯ ಸಂದರ್ಭಗಳಲ್ಲಿ 2.5 ಲಕ್ಷ ಸ್ಥಳಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳುವರು. ಸಂತ್ರಸ್ತರ ಮನೋಸ್ಥೈರ್ಯ ಹೆಚ್ಚಿಸಲು ಶ್ರಮಿಸುವರು’ ಎಂದು ಆರ್ಎಸ್ಎಸ್ನ ರಾಷ್ಟ್ರೀಯ ಪ್ರಚಾರ ಪ್ರಮುಖ್ ಸುನೀಲ್ ಅಂಬೇಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಸಂಭಾವ್ಯ 3ನೇ ಅಲೆ ಸಮಯದಲ್ಲಿ ಮಹಿಳೆಯರು ಹಾಗೂ ಮಕ್ಕಳು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಈ ಶಿಬಿರದಲ್ಲಿ ವಿಶೇಷ ಒತ್ತು ನೀಡಲಾಗುವುದು’ ಎಂದು ತಿಳಿಸಿದ್ದಾರೆ.