ಚೆನ್ನೈ: ಶಿಕ್ಷಣ ಮತ್ತು ಆರೋಗ್ಯಕ್ಕಾಗಿ ಸರ್ಕಾರ ಮಾಡುವ ವೆಚ್ಚವನ್ನು ‘ಉಚಿತ ಕೊಡುಗೆ’ ಎಂದು ಅರ್ಥೈಸಲು ಸಾಧ್ಯವಿಲ್ಲ. ಬಡವರು ಮತ್ತು ಹಿಂದುಳಿದವರಿಗಾಗಿ ವೆಚ್ಚ ಮಾಡಲಾಗುತ್ತಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಶನಿವಾರ ಹೇಳಿದರು. ಈ ಮೂಲಕ ಉಚಿತ ಯೋಜನೆಗಳಿಗೆ ವಿರೋಧ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿರುಗೇಟು ನೀಡಿದರು.
ಇಲ್ಲಿನ ಕೊಲತೂರ್ ವಿಧಾನಸಭಾ ಕ್ಷೇತ್ರದ ಆರುಮಿಗು ಕಪಲೀಶ್ವರರ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಮಾತನಾಡಿದ ಅವರು,ಉಚಿತ ಕೊಡುಗೆ ಬೇರೆ, ಕಲ್ಯಾಣ ಕಾರ್ಯಕ್ರಮಗಳು ಬೇರೆ ಎಂದು ಸುಪ್ರೀಂ ಕೋರ್ಟ್ ಕೂಡ ಹೇಳಿದೆ. ಶಿಕ್ಷಣ ಮತ್ತು ಆರೋಗ್ಯದ ಮೇಲಿನ ವೆಚ್ಚ ಉಚಿತ ಅಲ್ಲ. ಕಾರಣ ಶಿಕ್ಷಣ ಎಂದರೆ ಜ್ಞಾನ, ವೈದ್ಯಕೀಯ ಕ್ಷೇತ್ರ ಆರೋಗ್ಯಕ್ಕೆ ಸಂಬಂಧಿಸಿದ್ದು. ಈ ಎರಡೂ ಕ್ಷೇತ್ರಗಳಲ್ಲಿ ಸಾಕಷ್ಟು ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ಬಯಸುತ್ತದೆ ಎಂದು ಹೇಳಿದರು.
‘ಕೆಲವರು ಉಚಿತ ಯೋಜನೆ ಬೇಡ ಎಂಬ ಸಲಹೆ ನೀಡುತ್ತಾರೆ. ಇದರ ಬಗ್ಗೆ ಹೆಚ್ಚು ಮಾತನಾಡಿದರೆ ಅದು ರಾಜಕೀಯವಾಗುತ್ತದೆ. ಹಾಗಾಗಿ ಹೆಚ್ಚು ಮಾತನಾಡಲ್ಲ’ ಎಂದು ಪ್ರಧಾನಿ ಮೋದಿಗೆ ತಿರುಗೇಟು ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.