ಮುಂಬೈ: ಕೋವಿಡ್–19 ಪ್ರಸರಣ ತಡೆಯುವ ಸಲುವಾಗಿ ರಾಜ್ಯದ ಅಯ್ದ ಭಾಗಗಳಲ್ಲಿ ಕಟ್ಟುನಿಟ್ಟಿನ ಲಾಕ್ಡೌನ್ ಜಾರಿಗೊಳಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಗುರುವಾರ ಹೇಳಿದ್ದಾರೆ.
ಇಲ್ಲಿನ ಜೆ.ಜೆ.ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದುಕೊಂಡ ನಂತರ ಅವರು ಮಾತನಾಡಿದರು.
‘ಶೀಘ್ರವೇ ಅಧಿಕಾರಿಗಳ ಸಭೆ ನಡೆಸಿ, ರಾಜ್ಯದ ಯಾವ ಭಾಗಗಳಲ್ಲಿ ಯಾವ ಮಾರ್ಗಸೂಚಿಗಳನ್ನು ಜಾರಿಗೊಳಿಸಬೇಕು ಎಂಬುದನ್ನು ನಿರ್ಧರಿಸಲಾಗುವುದು’ ಎಂದರು.
‘ಸೋಂಕು ಪ್ರಸರಣ ತಡೆಯುವ ಸಲುವಾಗಿ ಮಾಸ್ಕ್ ಧರಿಸಬೇಕು, ವ್ಯಕ್ತಿಗತ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಅನಗತ್ಯವಾಗಿ ಹೊರಗಡೆ ಬರಬಾರದು ಎಂದು ಸರ್ಕಾರ ಜನರಿಗೆ ಮನವಿ ಮಾಡುತ್ತಲೇ ಇದೆ’ ಎಂದೂ ಹೇಳಿದರು.
ಮಹಾರಾಷ್ಟ್ರದಲ್ಲಿ ಬುಧವಾರ 13,659 ಹೊಸ ಕೋವಿಡ್–19 ಪ್ರಕರಣಗಳು ವರದಿಯಾಗಿವೆ. ಇದು ಈ ವರ್ಷದಲ್ಲಿ ಒಂದೇ ದಿನ ವರದಿಯಾದ ಗರಿಷ್ಠ ಪ್ರಕರಣಗಳ ಸಂಖ್ಯೆಯಾಗಿದೆ.
ರಾಜ್ಯದಲ್ಲಿ ಈ ವರೆಗೆ ವರದಿಯಾದ ಕೋವಿಡ್ ಪ್ರಕರಣಗಳ ಸಂಖ್ಯೆ 22,52,057. ಮೃತಪಟ್ಟವರ ಸಂಖ್ಯೆ 52,610 ಎಂದು ಮೂಲಗಳು ಹೇಳಿವೆ.