ನವದೆಹಲಿ: ಇಸ್ರೇಲ್ನ ಬೇಹುಗಾರಿಕೆ ಕುತಂತ್ರಾಂಶವಾದ ಪೆಗಾಸಸ್ ಬಳಸಿ ಬೇಹುಗಾರಿಕೆ ನಡೆಸಿರುವ ಆರೋಪದ ಕುರಿತು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಬುಧವಾರ ತಜ್ಞರ ಸಮಿತಿಯನ್ನು ನೇಮಿಸಿದೆ.
ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು ತನಿಖೆಗಾಗಿ ತ್ರಿಸದಸ್ಯ ಸಮಿತಿಯನ್ನು ರಚಿಸಿತು. ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಆರ್.ವಿ.ರವೀಂದ್ರನ್ ಅವರು ಸಮಿತಿಯ ನೇತೃತ್ವ ವಹಿಸಲಿದ್ದಾರೆ ಎಂದು ಪೀಠ ಹೇಳಿತು.
ರಾಷ್ಟ್ರೀಯ ಭದ್ರತೆಯನ್ನು ಉಲ್ಲೇಖಿಸಿದ ಕೇಂದ್ರ ಸರ್ಕಾರವು ಈ ವಿಷಯದಲ್ಲಿ ವಿವರವಾದ ಪ್ರಮಾಣಪತ್ರ ಸಲ್ಲಿಸಲು ನಿರಾಕರಿಸಿದೆ.
ಸರ್ಕಾರಿ ಏಜೆನ್ಸಿಗಳು ಪೆಗಾಸಸ್ ಕುತಂತ್ರಾಂಶ ಬಳಸಿಕೊಂಡು ದೇಶದ ಪ್ರಸಿದ್ಧ ನಾಗರಿಕರು, ರಾಜಕಾರಣಿಗಳು, ಲೇಖಕರ ಮೇಲೆ ಬೇಹುಗಾರಿಕೆ ನಡೆಸಿವೆ ಎಂಬ ಆರೋಪದ ವರದಿಗಳು ಬಹಿರಂಗವಾಗಿದ್ದವು. ಅದನ್ನು ಆಧರಿಸಿ ಕೆಲವರು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.