ನವದೆಹಲಿ: ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳ ಶೋಷಣೆ ತಡೆಯಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ದೂರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ಸುಪ್ರೀಂ ಕೋರ್ಟ್ ಮಂಗಳವಾರ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕುರಿತ ಸಾಮಾನ್ಯ ಚಿಕಿತ್ಸಾ ಶಿಷ್ಟಾಚಾರ ಸಂಹಿತೆ ಇಲ್ಲ. ಯಾವುದೇ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲೂ ಚಿಕಿತ್ಸಾ ಸಂಹಿತೆ ಶಿಷ್ಟಾಚಾರ ಹೊಂದಿಲ್ಲ ಎಂದು ಸೇವಾಸಂಸ್ಥೆ ಜನ್ ಸ್ವಸ್ಥ್ಯ ಅಭಿಯಾನ್ ಅರ್ಜಿ ಸಲ್ಲಿಸಿತ್ತು.
ಈ ಬಗ್ಗೆ ಪ್ರತಿಕ್ರಿಯೆ ದಾಖಲಿಸಲು ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠವು ಕೇಂದ್ರ ಸರ್ಕಾರಕ್ಕೆ ಸೂಚಿಸಿತು. ‘ಸರ್ಕಾರ ಇದಕ್ಕೆ ಪ್ರತಿಕ್ರಿಯಿಸುತ್ತದೆ ಎಂದು ಆಶಿಸುತ್ತೇವೆ’ ಎಂದೂ ಪೀಠ ಅಭಿಪ್ರಾಯಪಟ್ಟಿತು.
ಖಾಸಗಿ ಆಸ್ಪತ್ರೆಗಳು ರೋಗಿಗಳನ್ನು ಶೋಷಿಸುತ್ತಿವೆ. ಏಕರೂಪದ ಶಿಷ್ಟಾಚಾರ ಪಾಲಿಸುತ್ತಿಲ್ಲ. ಇದಕ್ಕೆ ನಿಯಂತ್ರಣ ವ್ಯವಸ್ಥೆ ಇಲ್ಲದ್ದೂ ಇದಕ್ಕೆ ಕಾರಣ. ಕೇಂದ್ರ ಸರ್ಕಾರ ಈ ಬಗ್ಗೆ ರಾಷ್ಟ್ರೀಯ ನೀತಿ ರೂಪಿಸಬೇಕು ಎಂದು ಅರ್ಜಿದಾರರು ವಾದಿಸಿದ್ದರು.
ಶೇ 70ರಷ್ಟು ರೋಗಿಗಳು ಖಾಸಗಿ ಆಸ್ಪತ್ರೆಗಳನ್ನು, ಶೇ 30ರಷ್ಟು ರೋಗಿಗಳು ಸರ್ಕಾರಿ ಆಸ್ಪತ್ರೆಗಳನ್ನು ಆಶ್ರಯಿಸಿದ್ದಾರೆ. ಈ ಹೀಗಾಗಿ, ಚಿಕಿತ್ಸಾ ಶಿಷ್ಟಾಚಾರ ಪಾಲನೆಯನ್ನು ಕಡ್ಡಾಯಗೊಳಿಸುವುದು ಅಗತ್ಯ. ಚಿಕಿತ್ಸೆಗೆ ವಿಧಿಸಬೇಕಾದ ದರ ಕುರಿತು ಸ್ಪಷ್ಟತೆ ಇರಬೇಕು ಎಂದು ಅವರು ಪ್ರತಿಪಾದಿಸಿದರು.