ನವದೆಹಲಿ: ಅಕ್ರಮ ಹಣ ವರ್ಗಾವಣೆ ಕಾಯ್ದೆಯ ಸಕ್ಷಮ ಪ್ರಾಧಿಕಾರದ (ಎಟಿಪಿಎಂಎಲ್ಎ) ಅಧ್ಯಕ್ಷ ಮತ್ತು ಸದಸ್ಯರ ಸ್ಥಾನವನ್ನು ಭರ್ತಿ ಮಾಡಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿದ್ದ ಅರ್ಜಿಗೆ ಸಂಬಂಧಿಸಿ ವಿವರಣೆ ನೀಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್.ಸುಭಾಷ್ ರೆಡ್ಡಿ ಮತ್ತು ಎಂ.ಆರ್.ಶಾ ಅವರಿದ್ದ ಪೀಠ, ಅರ್ಜಿದಾರರ ಪರ ಹಿರಿಯ ವಕೀಲ ಮಹಬಿರ್ ಸಿಂಗ್ ಅವರ ‘ಈ ಸ್ಥಾನಗಳು 2019ರಿಂದ ತೆರವಾಗಿವೆ’ ಎಂಬ ವಾದವನ್ನು ಪರಿಗಣಿಸಿತು.
ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆದಿದ್ದು, ನಾಲ್ಕು ವಾರಗಳ ಅವಧಿಯಲ್ಲಿ ಪ್ರತಿಕ್ರಿಯೆಯನ್ನು ದಾಖಲಿಸಬೇಕು ಎಂದು ಕೇಂದ್ರ ಹಣಕಾಸು ಸಚಿವಾಲಯಕ್ಕೆ ಪೀಠ ಸೂಚಿಸಿತು. ವಕೀಲ, ಸಾಮಾಜಿಕ ಕಾರ್ಯಕರ್ತ ಅಮಿತ್ ಸಾಹ್ನಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ಪೀಠವು ವಿಚಾರಣೆ ನಡೆಸಿತು.