ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಶಿ ತರೂರ್‌, ಪತ್ರಕರ್ತರ ವಿರುದ್ಧ ಎಫ್‌ಐಆರ್‌: ಫೆ.9ರಂದು ಸುಪ್ರೀಂ ವಿಚಾರಣೆ

Last Updated 5 ಫೆಬ್ರುವರಿ 2021, 16:44 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್‌ ನಾಯಕ ಶಶಿ ತರೂರ್‌ ಮತ್ತು ಹಿರಿಯ ಪತ್ರಕರ್ತರ ಮೇಲೆ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಫೆಬ್ರುವರಿ 9ರಂದು ಕೈಗೆತ್ತಿಗೊಳ್ಳಲಿದೆ.

ಗಣರಾಜ್ಯೋತ್ಸವ ದಿನ ನಡೆದಿದ್ದ ಟ್ರ್ಯಾಕ್ಟರ್‌ ರ್‍ಯಾಲಿ ವೇಳೆ ಮೃತಪಟ್ಟಿದ್ದ ಯುವಕನೋರ್ವನ ಸಾವಿಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ಶಶಿ ತರೂರ್‌ ಸೇರಿ ಹಲವು ಪತ್ರಕರ್ತರು ಟ್ವೀಟ್‌ ಮಾಡಿದ್ದರು. ಈ ಟ್ವೀಟ್‌ಗಳು ಸತ್ಯಕ್ಕೆ ದೂರವಾಗಿವೆ ಎಂದು ಆರೋಪಿಸಿ ಉತ್ತರ ಪ್ರದೇಶ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು.

ಉತ್ತರ ಪ್ರದೇಶ ಪೊಲೀಸರ ಕ್ರಮವನ್ನು ಪ್ರಶ್ನಿಸಿ ಶಶಿ ತರೂರ್‌, ರಾಜ್‌ದೀಪ್‌ ಸರ್ದೇಸಾಯಿ, ಮ್ರಿನಾಲ್‌ ಪಾಂಡೆ, ಜಾಫರ್ ಆಘಾ, ಅನಂತ್‌ ನಾಥ್‌ ಮತ್ತು ವಿನೋದ್‌ ಜೋಶ್ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯು ಪೆ.9ರಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ.

ರ್‍ಯಾಲಿ ವೇಳೆ ಟ್ರ್ಯಾಕ್ಟರ್‌ ಮಗುಚಿ ಬಿದ್ದು ಯುವಕನೋರ್ವ ಮೃತಪಟ್ಟಿದ್ದ. ಈ ಸುದ್ದಿಯನ್ನು ಪೂರ್ಣವಾಗಿ ಗ್ರಹಿಸದೇ, ಪೊಲೀಸರ ಗುಂಡೇಟಿಗೆ ಯುವಕ ಮೃತಪಟ್ಟಿದ್ದಾನೆಂದು ಕೆಲ ಮಾಧ್ಯಮಗಳು ವರದಿ ಮಾಡಿದವು. ಆ ವರದಿಗಳನ್ನು ಶಶಿ ತರೂರ್‌ ಸೇರಿದಂತೆ ಹಲವು ಪತ್ರಕರ್ತರು ಟ್ವೀಟ್‌ ಮಾಡಿದ್ದರು. ಆದರೆ, ಯುವಕನು ಪೊಲೀಸರ ಗುಂಡೇಟಿಗೆ ಬಲಿಯಾಗಿರಲಿಲ್ಲ ಎಂಬುದು ಪೋಸ್ಟ್‌ಮಾರ್ಟಂ ವರದಿ ಬಂದ ನಂತರ ತಿಳಿದಿದೆ.

ಯುವಕನ ಸಾವಿನ ಬಗೆಗಿನ ವರದಿಯನ್ನು ತಿರುಚಲಾಗಿದೆ. ಇದು ಪೂರ್ವಾಗ್ರಹ ಪೀಡಿತವಾಗಿದೆ. ಇವರು 'ರಾಷ್ಟ್ರೀಯ ಸುರಕ್ಷತೆ ಮತ್ತು ಜನರ ಜೀವನವನ್ನು ಅಪಾಯಕ್ಕೆ ದೂಡಿದ್ದಾರೆ' ಎಂದು ಉತ್ತರ ಪ್ರದೇಶ ಪೊಲೀಸರು ಆರೋಪಿಸಿದ್ದಾರೆ.

ಸೆಕ್ಷನ್ 124 ಎ (ದೇಶದ್ರೋಹ), 153-ಎ (ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), ಸೆಕ್ಷನ್ 295ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಕೃತ್ಯ), ಸೆಕ್ಷನ್ 504 (ಉದ್ದೇಶಪೂರ್ವಕ ಅವಮಾನ), ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ) ಮತ್ತು ಸೆಕ್ಷನ್ 120ಬಿ (ಮರಣದಂಡನೆ ಶಿಕ್ಷೆ ವಿಧಿಸುವ ಅಪರಾಧಕ್ಕೆ ಅಪರಾಧ ಸಂಚು).ಸೇರಿದಂತೆ 11 ಐಪಿಸಿ ವಿಭಾಗಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT