ಏ. 8ರೊಳಗೆ ಮುಖ್ತಾರ್ ಅನ್ಸಾರಿ ಹಸ್ತಾಂತರ: ಪಂಜಾಬ್ ಗೃಹ ಇಲಾಖೆ
ಚಂಡೀಗಡ: ಪಾತಕಿ ಹಾಗೂ ರಾಜಕಾರಣಿ ಮುಖ್ತಾರ್ ಅನ್ಸಾರಿ ಅವರನ್ನು ರೂಪ್ನಗರ ಜೈಲಿನಿಂದ ಏಪ್ರಿಲ್ 8ರೊಳಗೆ ಕಸ್ಟಡಿಗೆ ತೆಗೆದುಕೊಳ್ಳುವಂತೆ ಪಂಜಾಬ್ ಗೃಹ ಇಲಾಖೆಯು ಉತ್ತರ ಪ್ರದೇಶ ಸರ್ಕಾರಕ್ಕೆ ಹೇಳಿದೆ.
2019ರ ಜನವರಿಯಿಂದ ಮುಖ್ತಾರ್ ಅನ್ಸಾರಿ ಅವರು ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೂಪ್ನಗರ ಜೈಲಿನಲ್ಲಿ ಇದ್ದಾರೆ. ಅಲ್ಲದೆ ಉತ್ತರ ಪ್ರದೇಶದಲ್ಲಿ ಅನ್ಸಾರಿಯ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ.
ಹಲವು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿ ಮುಖ್ತಾರ್ ಅನ್ಸಾರಿಯನ್ನು ಉತ್ತರ ಪ್ರದೇಶ ಸರ್ಕಾರಕ್ಕೆ ಹಸ್ತಾಂತರಿಸುವಂತೆ ಮಾರ್ಚ್ 26ರಂದು ಸುಪ್ರೀಂಕೋರ್ಟ್, ಪಂಜಾಬ್ ಸರ್ಕಾರಕ್ಕೆ ಸೂಚಿಸಿತ್ತು.
ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಪಂಜಾಬ್ ಗೃಹ ಇಲಾಖೆಯು ‘ಅನ್ಸಾರಿ ಹಸ್ತಾಂತರಕ್ಕೆ ಬೇಕಾಗಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಿದೆ. ಅಲ್ಲದೆ ಏಪ್ರಿಲ್ 8ರೊಳಗೆ ಅನ್ಸಾರಿಯನ್ನು ಹಸ್ತಾಂತರಿಸಲಾಗುವುದು’ ಎಂದು ಪತ್ರದಲ್ಲಿ ತಿಳಿಸಿದೆ.
‘ಅನ್ಸಾರಿ ಕೆಲವೊಂದು ಆರೋಗ್ಯ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದಾರೆ. ರೂಪ್ನಗರ ಜೈಲಿನಿಂದ ಉತ್ತರಪ್ರದೇಶದ ಬಾಂದಾ ಜೈಲಿಗೆ ಹಸ್ತಾಂತರಿಸುವಾಗ ಈ ಅಂಶವನ್ನು ಗಮನದಲ್ಲಿಟ್ಟುಕೊಳ್ಳಬೇಕು’ ಎಂದು ಹೇಳಲಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.