ರೈತರ ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸಿ: ಕೇಂದ್ರಕ್ಕೆ ಪವಾರ್ ಸಲಹೆ

ಮುಂಬೈ: ರಾಷ್ಟ್ರವ್ಯಾಪಿ ರೈತರು ನಡೆಸುತ್ತಿರುವ ಪ್ರತಿಭಟನೆಗಳನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರೈತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿರುವಾಗ ಅದನ್ನು ಕೇಂದ್ರ ಸರ್ಕಾರ ಪರಿಗಣಿಸಬೇಕು. ಆದರೆ, ದುರದೃಷ್ಟವಶಾತ್ ದೇಶದಲ್ಲಿ ಅದು ಆಗುತ್ತಿಲ್ಲ’ ಎಂದು ಪವಾರ್ ಬೇಸರ ವ್ಯಕ್ತಪಡಿಸಿದ್ದಾರೆ.
‘ಬುದ್ಧಿವಂತಿಕೆಯು ಸರ್ಕಾರದ ಮೇಲೆ ಬೆಳಕು ಚೆಲ್ಲುತ್ತದೆ ಮತ್ತು ಸಮಸ್ಯೆಯನ್ನು ಪರಿಹರಿಸಲು ಅರಿವು ಬೇಕಾಗುತ್ತದೆ ಎಂದು ನಾನು ಭಾವಿಸುತ್ತೇನೆ. ರೈತರ ಪ್ರತಿಭಟನೆ ದೆಹಲಿಗೆ ಸೀಮಿತವಾಗಿಲ್ಲ. ಆದರೆ, ದೇಶದ ಜನ ಪ್ರತಿಭಟನಾಕಾರರ ಪರವಾಗಿ ನಿಲ್ಲುತ್ತಾರೆ’ ಎಂದರು.
ಹೊಸ ಕೃಷಿ ಕಾನೂನುಗಳ ವಿರುದ್ಧ ಸಾವಿರಾರು ರೈತರು ದೆಹಲಿಯ ವಿವಿಧ ಗಡಿ ಪ್ರದೇಶಗಳಲ್ಲಿ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದು, ಡಿ.8ರಂದು ‘ಭಾರತ್ ಬಂದ್’ಗೆ ಕರೆ ನೀಡಿದ್ದಾರೆ. ಪಂಜಾಬ್ ಮತ್ತು ಹರಿಯಾಣದ ರೈತರು ದೇಶದ ಕೃಷಿ ಮತ್ತು ಆಹಾರ ಪೂರೈಕೆಗೆ ಹೆಚ್ಚಿನ ಕೊಡುಗೆ ನೀಡುತ್ತಿದ್ದಾರೆ ಎಂದು ಪವಾರ್ ಹೇಳಿದ್ದಾರೆ.
ಈ ರಾಜ್ಯಗಳ ರೈತರು ದೇಶದ ಜನರ ಹೊಟ್ಟೆ ತುಂಬಿಸುವುದರ ಜೊತೆಗೆ ಆಹಾರ ಧಾನ್ಯಗಳನ್ನು ವಿಶೇಷವಾಗಿ ಅಕ್ಕಿ ಮತ್ತು ಗೋಧಿಯನ್ನು ಒಂದು ಡಜನ್ಗೂ ಹೆಚ್ಚು ದೇಶಗಳಿಗೆ ಪೂರೈಸುವಲ್ಲಿ ಪ್ರಮುಖ ಕೊಡುಗೆ ನೀಡಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.
ಕೃಷಿ ಮಸೂದೆಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆ ಕುರಿತು ಚರ್ಚಿಸಲು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಡಿ.9ರಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.