ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (ನೀಟ್) ಸಿಂಧುತ್ವವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದೆ.
‘ವೈದ್ಯಕೀಯ ಹಾಗೂ ದಂತ ವೈದ್ಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಯುವ ಈ ಸಾಮಾನ್ಯ ಪರೀಕ್ಷೆಯು ಒಕ್ಕೂಟ ವ್ಯವಸ್ಥೆಯ ತತ್ವಕ್ಕೆ ವಿರುದ್ಧವಾಗಿದೆ’ ಎಂದು ತಮಿಳುನಾಡು ಸರ್ಕಾರವು ಸಲ್ಲಿಸಿರುವ ಅರ್ಜಿಯಲ್ಲಿ ಪ್ರತಿಪಾದಿಸಲಾಗಿದೆ.
ವಕೀಲ ಅಮಿತ್ ಆನಂದ್ ತಿವಾರಿ ಅವರ ಮೂಲಕ ಈ ಅರ್ಜಿಯನ್ನು ಸಲ್ಲಿಸಲಾಗಿದೆ.
‘ಶಿಕ್ಷಣ ಕುರಿತು ರಾಜ್ಯಗಳು ನಿರ್ಧಾರ ಕೈಗೊಳ್ಳುವುದಕ್ಕೆ ಸಂಬಂಧಿಸಿದ ಸ್ವಾಯತ್ತತೆಯನ್ನು ಈ ಪರೀಕ್ಷೆಯು (ನೀಟ್) ಕಸಿದುಕೊಳ್ಳುತ್ತದೆ. ಹೀಗಾಗಿ, ಈ ಪರೀಕ್ಷಾ ವ್ಯವಸ್ಥೆಯು ಸಂವಿಧಾನದ ಮೂಲ ಸ್ವರೂಪದ ಉಲ್ಲಂಘನೆಯೂ ಆಗುತ್ತದೆ’ ಎಂದು ಅರ್ಜಿಯಲ್ಲಿ ಹೇಳಲಾಗಿದೆ.