ನವದೆಹಲಿ: ಶೈಕ್ಷಣಿಕ ಸಂಸ್ಥೆಗಳನ್ನು ನಡೆಸುವುದಕ್ಕೆ ಅನುಕೂಲವಾಗುವಂತೆ ಭಾಷಾ ಅಲ್ಪಸಂಖ್ಯಾತರನ್ನು ಗುರುತಿಸಿ (ಧಾರ್ಮಿಕ ಅಲ್ಪಸಂಖ್ಯಾತರಂತೆ) ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ, ತಮಿಳುನಾಡು ಮೂಲದ ಶೈಕ್ಷಣಿಕ ಸಂಸ್ಥೆಯೊಂದು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದೆ.
ಮಲಯಾಳಂ ಮಾತನಾಡುವ ಭಾಷಾ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ತಮಿಳುನಾಡು ಮತ್ತು ಕರ್ನಾಟಕದಲ್ಲಿ ಶಾಲೆಗಳನ್ನು ನಡೆಸುತ್ತಿರುವ ‘ಸಿಟಿಜನ್ಸ್ ಎಜುಕೇಷನ್ ಸೊಸೈಟಿ’ ಈ ಅರ್ಜಿ ಸಲ್ಲಿಸಿದೆ.
ಪಂಜಾಬ್, ಮಿಜೋರಾಂ ಸೇರಿದಂತೆ 10 ರಾಜ್ಯಗಳಲ್ಲಿ ಹಿಂದೂಗಳಿಗೆ ಅಲ್ಪಸಂಖ್ಯಾತರ ಸೌಲಭ್ಯಗಳನ್ನು ಕಲ್ಪಿಸುವಂತೆ ಕೋರಿ ಸಲ್ಲಿಕೆಯಾಗಿರುವ ಪಿಐಎಲ್ನಲ್ಲಿ ತನ್ನನ್ನೂ ಪಾರ್ಟಿಯನ್ನಾಗಿ ಪರಿಗಣಿಸುವಂತೆ ಸೊಸೈಟಿ ಅರ್ಜಿಯಲ್ಲಿ ಕೋರಿದೆ.
ಕಳೆದ ಆಗಸ್ಟ್ನಲ್ಲಿ ಸುಪ್ರೀಂಕೋರ್ಟ್ನಲ್ಲಿ ಪಿಐಎಲ್ ಸಲ್ಲಿಸಿದ್ದ ವಕೀಲ ಅಶ್ವಿನಿ ಉಪಾಧ್ಯಾಯ ಅವರು, 10 ರಾಜ್ಯಗಳಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗಿದ್ದಾರೆ. ಅವರನ್ನು ರಾಜ್ಯಮಟ್ಟದಲ್ಲಿ ಅಲ್ಪಸಂಖ್ಯಾತರೆಂದು ಗುರುತಿಸುವ ಮಾರ್ಗಸೂಚಿಗಳನ್ನು ರೂಪಿಸಲು ನಿರ್ದೇಶನ ನೀಡುವಂತೆ ಕೋರಿದ್ದರು.
ಈ ಸಂಬಂಧ ಸುಪ್ರೀಂಕೋರ್ಟ್ ಕೇಂದ್ರಕ್ಕೆ ನೋಟಿಸ್ ಜಾರಿಗೊಳಿಸಿತ್ತು. ಶಿಕ್ಷಣ ಸಂಸ್ಥೆಗಳನ್ನು ನಡೆಸುವಲ್ಲಿ ಮುಸ್ಲಿಂ, ಸಿಖ್, ಕ್ರೈಸ್ತರಿಗೆ ದೊರೆಯುತ್ತಿರುವ ಪ್ರಯೋಜನಗಳು ಈ ರಾಜ್ಯಗಳಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂಗಳಿಗೆ ದೊರೆಯುತ್ತಿಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿತ್ತು.