ನವದೆಹಲಿ: ‘ಭಯೋತ್ಪಾದಕರನ್ನು ಸೃಷ್ಟಿಸುವ ದೇಶಗಳೇ, ತನ್ನನ್ನು ಭಯೋತ್ಪಾದನೆಯ ಬಲಿಪಶುವೆಂಬಂತೆ ಬಿಂಬಿಸಿಕೊಳ್ಳಲು ಪ್ರಯತ್ನಿಸುತ್ತಿವೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಪರೋಕ್ಷವಾಗಿ ಪಾಕಿಸ್ತಾನವನ್ನು ಟೀಕಿಸಿದರು.
ಇಂಧನ ಮತ್ತು ಸಂಪನ್ಮೂಲಗಳ ಸಂಸ್ಥೆ (ಟಿಇಆರ್ಐ) ಆಯೋಜಿಸಿದ್ದ ಉಪನ್ಯಾಸದಲ್ಲಿ ಮಾತನಾಡಿದ ಅವರು,‘ಭಯೋತ್ಪಾದನೆ ಕ್ಯಾನ್ಸರ್ ಇದ್ದಂತೆ, ಅದು ಮಾನವ ಕುಲದ ಮೇಲೆ ಪರಿಣಾಮ ಬೀರುತ್ತದೆ’ ಎಂದು ಹೇಳಿದರು.
ಪಾಕಿಸ್ತಾನ ಭಯೋತ್ಪಾದಕ ಸಂಘಟನೆಗಳನ್ನು ಪೋಷಿಸುವುದು, ನಿರ್ದೇಶಿಸುವುದು, ಬೆಂಬಲ ನೀಡುತ್ತಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಅಂತರರಾಷ್ಟ್ರೀಯ ಒತ್ತಡಕ್ಕೆ ಮಣಿದು ಭಯೋತ್ಪಾದಕರ ಮೇಲೆ ಕ್ರಮ ತೆಗೆದುಕೊಳ್ಳುವ ಬೆಳವಣಿಗೆಗೆ ಮುನ್ನುಡಿ ಬರೆದಿದೆ.
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸೇರಿದಂತೆ 80 ಉಗ್ರರನ್ನು ನಿರ್ಬಂಧಗಳ ಪಟ್ಟಿಗೆ ಸೇರಿಸಿದ ಬೆನ್ನಲ್ಲೇ ಜೈಶಂಕರ್ ಈ ಹೇಳಿಕೆ ನೀಡಿದ್ದಾರೆ.ಭಯೋತ್ಪಾದನೆಯನ್ನು ಹತ್ತಿಕ್ಕಲು ಜಾಗತಿಕ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದ್ದು, ಅದರ ಫಲಿತಾಂಶವೇ ಕಳೆದ ವಾರದ ಬೆಳವಣಿಗೆಯಾಗಿದೆ ಎಂದು ಅವರು ಹೇಳಿದ್ದಾರೆ.