ಮುಂಬೈ: ದೇಶದ ಸಂವಿಧಾನದ ಸ್ವರೂಪ, ಪ್ರಧಾನಿ, ರಾಷ್ಟ್ರಪತಿ ಮತ್ತು ರಾಜ್ಯಪಾಲರ ಹುದ್ದೆಗಳು ಜಾತ್ಯತೀತವಾಗಿದೆ ಎಂದು ಶಿವಸೇನೆ ಸಂಸದ ಸಂಜಯ್ ರಾವುತ್ ಹೇಳಿದ್ದಾರೆ.
ಕೋವಿಡ್–19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಮುಚ್ಚಲಾಗಿದ್ದ ದೇಗುಲಗಳನ್ನು ಮರಳಿ ತೆರೆಯುವ ವಿಚಾರವಾಗಿ ಮುಖ್ಯಮಂತ್ರಿ ಉದ್ಧವ ಠಾಕ್ರೆ ನೇತೃತ್ವದ ಸರ್ಕಾರ ಮತ್ತು ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರ ನಡುವೆ ‘ಜಾತ್ಯತೀತ’ದ ವಿಷಯವಾಗಿ ಹಗ್ಗ ಜಗ್ಗಾಟ ನಡೆಯುತ್ತಿದೆ.
If the (Maharasthra) Governor raises questions on the secularism of the CM, the President & the PM should ask the Governor if he is secular or not. No one wants to keep temples shut but we have to save people's lives: Shiv Sena MP Sanjay Raut https://t.co/hJml0Hiuz0
— ANI (@ANI) October 15, 2020
ಹೀಗಿರುವಾಗಲೇ ಮಾಧ್ಯಮಗಳೊಂದಿಗೆ ಮಾತನಾಡಿರುವ ರಾಜ್ಯಸಭೆ ಸದಸ್ಯ ಸಂಜಯ್ ರಾವುತ್, ‘ದೇಶದ ಸಂವಿಧಾನದ ಸ್ವರೂಪ, ಪ್ರಧಾನಿ, ರಾಷ್ಟ್ರಪತಿ ಮತ್ತು ರಾಜ್ಯಪಾಲರ ಹುದ್ದೆಗಳು ಜಾತ್ಯತೀತವಾಗಿವೆ. ಹಿಂದುತ್ವವು ನಮ್ಮ ಹೃದಯದಲ್ಲಿದೆ ಮತ್ತು ನಮ್ಮ ಆಚರಣೆಯಲ್ಲಿದೆ. ಆದರೆ ದೇಶವು ಜಾತ್ಯತೀತ ಸ್ವರೂಪದಲ್ಲಿರುವ ಸಂವಿಧಾನದ ಆಧಾರದ ಮೇಲೆ ನಡೆಯುತ್ತದೆ’ ಎಂದು ಹೇಳಿದ್ದಾರೆ.
ಮುಂದುವರಿದು, ‘ಒಂದು ವೇಳೆ ಮಹಾರಾಷ್ಟ್ರ ರಾಜ್ಯಪಾಲರು ಸಿಎಂ ಠಾಕ್ರೆ ಅವರ ಜಾತ್ಯತೀತದ ಬಗ್ಗೆ ಪ್ರಶ್ನೆಗಳನ್ನು ಎತ್ತುವುದೇ ಆದರೆ, ರಾಷ್ಟ್ರಪತಿ ಮತ್ತು ಪ್ರಧಾನಿ ರಾಜ್ಯಪಾಲರು ಜಾತ್ಯತೀತರಾಗಿದ್ದಾರೆಯೇ ಇಲ್ಲವೇ ಎಂಬುದರ ಬಗ್ಗೆ ಅವರನ್ನು ಪ್ರಶ್ನೆ ಮಾಡಬೇಕು. ದೇವಾಲಯಗಳನ್ನು ಮುಚ್ಚಲು ಯಾರೂ ಬಯಸುವುದಿಲ್ಲ. ಆದರೆ ನಾವು ಜನರ ಜೀವವನ್ನು ಉಳಿಸಬೇಕಾಗಿದೆ,’ ರಾವುತ್ ಹೇಳಿದ್ದಾರೆ.
ಈ ಮಧ್ಯೆ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರನ್ನು ಹಿಂದಕ್ಕೆ ಕರೆದುಕೊಳ್ಳಬೇಕು ಎಂದು ಶಿವಸೇನೆಯು ತನ್ನ ಮುಖವಾಣಿ ಸಾಮ್ನಾದಲ್ಲಿ ಸಂಪಾದಕೀಯ ಬರೆದಿದೆ.
ಸಂಘ ಸಂಸ್ಥೆಗಳ ಮನವಿಯ ನಂತರವೂ ದೇವಾಲಯಗಳನ್ನು ತೆರೆಯದ ಸರ್ಕಾರದ ನಿಲುವಿನ ಕುರಿತು ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದ ರಾಜ್ಯಪಾಲ ಕೋಶಿಯಾರಿ, ‘ನೀವು ಹಿಂದುತ್ವದ ಪ್ರಬಲ ಪ್ರತಿಪಾದಕರಾಗಿದ್ದೀರಿ. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಅಯೋಧ್ಯೆಗೆ ಭೇಟಿ ನೀಡುವ ಮೂಲಕ ಭಗವಾನ್ ರಾಮನ ಕುರಿತಾದ ನಿಮ್ಮ ಭಕ್ತಿಯನ್ನು ಸಾರ್ವಜನಿಕವಾಗಿ ತಿಳಿಯಪಡಿಸಿದ್ದೀರಿ. ಆಷಾಢ ಏಕಾದಶಿಯಂದು ಫಂಡರಾಪುರದ ವಿಠ್ಠಲ ರುಕ್ಮಿಣಿ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದೀರಿ. ಪೂಜಾ ಸ್ಥಳಗಳ ಪುನರಾರಂಭ ಮುಂದೂಡಲು ನೀವು ಯಾವುದಾದರೂ ದೈವೀಕ ಮುನ್ಸೂಚನೆಯನ್ನು ಪಡೆಯುತ್ತಿದ್ದೀರಾ ಅಥವಾ ದಿಢೀರಾಗಿ, ಹಿಂದೆ ನೀವು ದ್ವೇಷಿಸುತ್ತಿದ್ದ ಜಾತ್ಯತೀತರಾದಿರಾ ಎಂಬುದಾಗಿ ಅಚ್ಚರಿಯಾಗಿದೆ' ಎಂದು ಹೇಳಿದ್ದರು.
ತಕ್ಷಣವೇ ಇದಕ್ಕೆ ಪ್ರತಿಯಾಗಿ ಪತ್ರ ಬರೆದ ಉದ್ದವ್, ‘ನೀವು ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ್ದೀರಿ. ಜಾತ್ಯತೀತತೆಯು ಸಂವಿಧಾನದ ಅಂಗ’ ಎಂದು ಉತ್ತರಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.