ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣ, ಆಮ್ಲಜನಕ ಮತ್ತು ಐಸಿಯು ಹಾಸಿಗೆಗಳ ಕೊರತೆ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕೋವಿಡ್ ಪರಿಸ್ಥಿತಿ ನಿರ್ವಹಣೆ ಕುರಿತಾಗಿ ಸರ್ಕಾರವನ್ನು ಟೀಕಿಸಿರುವ ರಾಹುಲ್ ಗಾಂಧಿ, ‘ಕೊರೊನಾದಿಂದಾಗಿ ಮನುಷ್ಯನ ದೇಹದಲ್ಲಿ ಆಮ್ಲಜನಕ ಕೊರತೆ ಉಂಟಾಗಬಹುದು. ಆದರೆ ಆಮ್ಲಜನಕ ಪೂರೈಕೆ ಮತ್ತು ಐಸಿಯು ಹಾಸಿಗೆಯಲ್ಲಿ ಉಂಟಾಗಿರುವ ಕೊರತೆಗೆ ಸರ್ಕಾರವೇ ಹೊಣೆ. ಇದರಿಂದಾಗಿ ಹಲವಾರು ಮಂದಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಭಾರತದಲ್ಲಿ ಒಂದೇ ದಿನ 3,32,730 ಹೊಸ ಪ್ರಕರಣಗಳು ಪತ್ತೆಯಾಗಿವೆ. 2,263 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 1,62,63,695 ಏರಿಕೆಯಾಗಿವೆ. ಸಾವಿನ ಸಂಖ್ಯೆಯೂ 1,86,920ಕ್ಕೆ ಹೆಚ್ಚಿದೆ ಎಂದು ಆರೋಗ್ಯ ಸಚಿವಾಲಯವು ತಿಳಿಸಿದೆ.