ಮಾಲ್ಡಾ (ಪಶ್ಚಿಮ ಬಂಗಾಳ): ರಾಮನನ್ನು ವಿರೋಧಿಸುವವರಿಗೆ ಪಶ್ಚಿಮ ಬಂಗಾಳದಲ್ಲಿ ಅವಕಾಶವಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ.
ನೇತಾಜಿ ಸುಭಾಷ್ಚಂದ್ರ ಬೋಸ್ ಅವರ ಜಯಂತಿ ದಿನ ಸಮಾರಂಭದಲ್ಲಿ ಸೇರಿದ್ದ ಕೆಲವರು ‘ಜೈ ಶ್ರೀರಾಮ್’ ಘೋಷಣೆ ಕೂಗಿದ್ದಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾಷಣ ಮಾಡದೆ ತೆರಳಿದ್ದನ್ನು ಉಲ್ಲೇಖಿಸಿ ಆದಿತ್ಯನಾಥ ಈ ಹೇಳಿಕೆ ನೀಡಿದ್ದಾರೆ.
ಮಾಲ್ಡಾದಲ್ಲಿ ರ್ಯಾಲಿಯೊಂದರಲ್ಲಿ ಮಾತನಾಡಿದ ಯೋಗಿ, ‘ರಾಜ್ಯದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಲು ಅವಕಾಶವಿಲ್ಲ. ಆದರೆ, ಇದನ್ನು ಮುಂದುವರಿಯಲು ಇಲ್ಲಿನ ಜನ ಬಿಡುವುದಿಲ್ಲ’ ಎಂದು ಹೇಳಿದ್ದಾರೆ.
‘ಅಯೋಧ್ಯೆಯಲ್ಲಿ ಭಗವಾನ್ ರಾಮನ ಭಕ್ತರ ಮೇಲೆ ಗುಂಡು ಹಾರಿಸಿದ್ದ ಸರ್ಕಾರವಿತ್ತು. ಆ ಸರ್ಕಾರ ನಂತರ ಏನಾಯಿತು ಎಂಬುದನ್ನು ನೀವು ನೋಡಬಹುದು. ಇದೀಗ ಬಂಗಾಳದಲ್ಲಿ ಟಿಎಂಸಿ ಸರ್ಕಾರದ ಸರದಿ ಎಂಬುದನ್ನು ಮಮತಾ ದೀದಿಗೆ ತಿಳಿಯಪಡಿಸಲು ಇಚ್ಚಿಸುತ್ತೇನೆ’ ಎಂದು ಆದಿತ್ಯನಾಥ ಹೇಳಿದ್ದಾರೆ.
ಒಂದು ಕಾಲದಲ್ಲಿ ದೇಶವನ್ನು ಮುನ್ನಡೆಸಿದ್ದ ಬಂಗಾಳವು ಇಂದು ಟಿಎಂಸಿ ಸರ್ಕಾರದಿಂದಾಗಿ ಕಾನೂನುಬಾಹಿರ ಪರಿಸ್ಥಿತಿಯನ್ನು ಎದುರಿಸುತ್ತಿದ ಎಂದೂ ಅವರು ಟೀಕಿಸಿದ್ದಾರೆ.
‘ಲವ್ ಜಿಹಾದ್’, ಗೋ ಕಳ್ಳಸಾಗಣೆ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗಿವೆ ಎಂದು ಅವರು ಆರೋಪಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.