ಶ್ರೀನಗರ: ಮಧ್ಯ ಕಾಶ್ಮೀರದ ಬುಡ್ಗಾಂ ಜಿಲ್ಲೆಯ ವಾಟರ್ಹೇಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿರುವ ಎನ್ಕೌಂಟರ್ನಲ್ಲಿ ಮೂವರು ಉಗ್ರರು ಹತರಾಗಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
‘ಅಡಗಿಕೊಂಡಿದ್ದ ಲಷ್ಕರ್–ಎ–ತಯಬಾದ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ. ಸ್ಥಳದಿಂದ ಶವಗಳನ್ನು ಪಡೆಯಲಾಗುತ್ತಿದೆ. ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಕಾಶ್ಮೀರ ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಜಯ್ ಕುಮಾರ್ ಅವರು ಟ್ವೀಟ್ ಮಾಡಿದ್ದಾರೆ.
ಲಷ್ಕರ್–ಎ–ತಯಬಾ ಸಂಘಟನೆಯ ಭಯೋತ್ಪಾದಕ ಲತೀಫ್ ರಾಥರ್ ಸೇರಿದಂತೆ ಮೂವರು ಉಗ್ರರನ್ನು ಭದ್ರತಾ ಪಡೆಯ ಸಿಬ್ಬಂದಿ ಹೊಡೆದು ಉರುಳಿಸಿರುವುದು ನಮಗೆ ಸಿಕ್ಕ ದೊಡ್ಡ ಗೆಲುವೆಂದು ವಿಜಯ್ ಕುಮಾರ್ ತಿಳಿಸಿದ್ದಾರೆ.
ರಾಹುಲ್ ಭಟ್ ಹಾಗೂ ಅಮ್ರೀನ್ ಭಟ್ ಹತ್ಯೆಗೆ ಲತೀಫ್ ರಾಥರ್ ಕಾರಣವಾಗಿದ್ದನೆಂಬ ಮಾಹಿತಿಯನ್ನು ಅಧಿಕಾರಿಗಳು ಹಂಚಿಕೊಂಡಿದ್ದಾರೆ.