ನವದೆಹಲಿ: ರಾಜ್ಯದ ಮುಷ್ಕರನಿರತ ಸಾರಿಗೆ ನೌಕರರ ಬೇಡಿಕೆಗಳ ಈಡೇರಿಕೆಗೆ ಆದ್ಯತೆ ನೀಡದ ಸರ್ಕಾರ, ಸಾರಿಗೆ ವ್ಯವಸ್ಥೆಯನ್ನು ಖಾಸಗೀಕರಣಗೊಳಿಸುವ ಹುನ್ನಾರ ನಡೆಸಿದೆ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.
ಎಐಸಿಸಿ ಕಚೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕ ವಲಯದ ಸಾರಿಗೆ ಸಂಸ್ಥೆಗಳನ್ನು ಸಂಪೂರ್ಣ ಬಂದ್ ಮಾಡುವತ್ತ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದರು.
ಪ್ರಯಾಣಿಕರಿಗೆ ಹೊರೆಯಾಗದಂತೆ ಸುಲಭ ದರದಲ್ಲಿ ಸಾರಿಗೆ ಸೌಲಭ್ಯ ನೀಡುತ್ತಿರುವ ರಾಜ್ಯದ ಸಾರಿಗೆ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡುವ ಕುತಂತ್ರ ನಡೆದಿರುವುದು ಸರ್ಕಾರದ ವರ್ತನೆಯಿಂದ ಸ್ಪಷ್ಟವಾಗುತ್ತಿದೆ ಎಂದು ಅವರು ದೂರಿದರು.
ಮುಷ್ಕರ ನಿರತರೊಂದಿಗೆ ಮಾತುಕತೆ ನಡೆಸಿ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳದ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರದಂತೆಯೇ ಸಾರ್ವಜನಿಕ ಒಡೆತನದ ಉದ್ಯಮಗಳನ್ನು ಮಾರಾಟ ಮಾಡುವ ಪ್ರಯತ್ನ ಮಾಡುತ್ತಿದೆ. ಬಡ ನೌಕರರ ಉದ್ಯೋಗ ಕಿತ್ತುಕೊಳ್ಳುವ ಕೆಟ್ಟ ಪ್ರಯತ್ನಕ್ಕೆ ಸರ್ಕಾರ ಕೈಹಾಕಿದೆ ಎಂದು ಅವರು ಟೀಕಿಸಿದರು.
ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುತ್ತಿರುವ ಸಾರಿಗೆ ಸಂಸ್ಥೆಗಳಿಂದ ಲಾಭದ ನಿರೀಕ್ಷೆ ಇಟ್ಟುಕೊಳ್ಳುವುದು ಸರಿಯಲ್ಲ. ಮುಷ್ಕರ ನಡೆಸುತ್ತಿರುವ ನೌಕರರನ್ನು ಬೆದರಿಸದೆ ಅವರ ಹಕ್ಕುಗಳ ರಕ್ಷಣೆಯತ್ತ ಸರ್ಕಾರ ಚಿಂತನೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.