ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಬೆಲೆ ಏರಿಕೆ, ನಿರುದ್ಯೋಗ ಮತ್ತು ಸಂವಿಧಾನದ ಮೇಲಿನ ದಾಳಿಯಂತಹ ವಿಷಯ ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಒಗ್ಗಟ್ಟಿನ ದನಿ ಎತ್ತಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಬುಧವಾರ 13 ವಿರೋಧ ಪಕ್ಷಗಳು ಒಮ್ಮತದ ನಿರ್ಧಾರ ತೆಗೆದುಕೊಂಡಿವೆ.
ಸಂಸತ್ ಚಳಿಗಾಲದ ಅಧಿವೇಶನದ ಕಾರ್ಯತಂತ್ರ ರೂಪಿಸಲು ಖರ್ಗೆ ಅವರ ನೇತೃತ್ವದಲ್ಲಿ ನಡೆದ ಸಭೆಗೆ ತೃಣಮೂಲ ಕಾಂಗ್ರೆಸ್, ಎನ್ಸಿಪಿ, ಆಮ್ ಆದ್ಮಿ ಪಕ್ಷ, ಡಿಎಂಕೆ, ಸಿಪಿಎಂ, ಆರ್ಎಸ್ಪಿ, ಶಿವಸೇನಾ (ಠಾಕ್ರೆ), ಆರ್ಎಲ್ಡಿ, ಎಂಡಿಎಂಕೆ ಸೇರಿ ಪ್ರಮುಖ ಪಕ್ಷಗಳ ನಾಯಕರು ಹಾಜರಾಗಿದ್ದರು.
‘ಕಳೆದ ಬಾರಿಯಂತೆ ಪ್ರತಿಪಕ್ಷಗಳು ಚರ್ಚೆಗೆ ಅಡ್ಡಿಪಡಿಸುವ ಸಾಧ್ಯತೆಯಿಲ್ಲ. ಆದರೆ, ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲಿವೆ. ಕಲಾಪಕ್ಕೆ ಅಡ್ಡಿಪಡಿಸಿದ್ದನ್ನು ನೆಪವಾಗಿಸಿ, ಸರ್ಕಾರ ಉತ್ತರದಾಯಿತ್ವದಿಂದ ತಪ್ಪಿಸಿಕೊಳ್ಳುತ್ತಿತ್ತು. ಆದರೆ, ಈ ಬಾರಿ ಅದಕ್ಕೆ ಅವಕಾಶ ಕಲ್ಪಿಸದೆ ಸುಗಮ ಕಲಾಪಕ್ಕೆ ದಾರಿ ಮಾಡಿಕೊಡಲು ನಿರ್ಧರಿಸಲಾಗಿದೆ’ ಎಂದು ಮೂಲಗಳು ಹೇಳಿವೆ.
‘ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಚರ್ಚೆ ಮತ್ತು ಶೂನ್ಯ ವೇಳೆಯಲ್ಲಿ ಬೆಲೆ ಏರಿಕೆ, ನಿರುದ್ಯೋಗ, ಸಾಂವಿಧಾನಿಕ ಸಂಸ್ಥೆಗಳ ಮೇಲಿನ ದಾಳಿ,ಇಡಬ್ಲ್ಯುಎಸ್ಮುಂತಾದಪ್ರಮುಖ 20 ಜನಕೇಂದ್ರಿತ ಸಮಸ್ಯೆಗಳ ಬಗ್ಗೆ ದನಿ ಎತ್ತಲು ನಾಯಕರು ಸರ್ವಾನುಮತದಿಂದ ನಿರ್ಧರಿಸಿದರು. ಭಾರತ- ಚೀನಾ ಗಡಿ ವಿಷಯದ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಬಯಸಿದೆ. ಪ್ರಮುಖ ಮಸೂದೆಗಳನ್ನು ಪರಿಶೀಲನೆಗಾಗಿಸ್ಥಾಯಿ ಸಮಿತಿಗಳು ಅಥವಾ ಸೂಕ್ತ ಪರಿಶೀಲನಾ ಸಮಿತಿಗಳಿಗೆ ಕಳುಹಿಸುವಂತೆ ಒತ್ತಾಯಿಸಲು ತೀರ್ಮಾನಿಸಲಾಗಿದೆ’ಎಂದು ಮೂಲಗಳು ತಿಳಿಸಿವೆ.
‘ಸಮಾನಮನಸ್ಕ ಪಕ್ಷಗಳೆಲ್ಲವೂ ಸೇರಿ ಜನರ ಸಮಸ್ಯೆಗಳ ಬಗ್ಗೆ ಗಟ್ಟಿಯಾಗಿ ದನಿ ಎತ್ತುತ್ತೇವೆ. ಪ್ರಧಾನಿ ಮೋದಿ ಅವರು ಚರ್ಚೆ ವೇಳೆ ಪ್ರತಿಪಕ್ಷಗಳಿಗೆ ಹೆಚ್ಚಿನ ಅವಕಾಶದ ಬಗ್ಗೆ ಮಾತನಾಡಿದ್ದಾರೆ.ಸರ್ಕಾರ ನುಡಿದಂತೆ ನಡೆಯಬಹುದೆಂಬ ನಿರೀಕ್ಷೆಯಲ್ಲಿದ್ದೇವೆ.ಸಂಸದೀಯ ನಡಾವಳಿಗಳು ಮತ್ತು ಚರ್ಚೆಗಳಲ್ಲಿ ಸಂಪೂರ್ಣ ಸಹಕಾರ ನೀಡಲು ಸಿದ್ಧರಿದ್ದೇವೆ’ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.