ಬಲಿಯಾ (ಉತ್ತರ ಪ್ರದೇಶ): ಎಐಸಿಸಿ ಸದಸ್ಯರಾಗಿದ್ದ ಉತ್ತರ ಪ್ರದೇಶದ ಇಬ್ಬರು ಹಿರಿಯ ಕಾಂಗ್ರೆಸ್ ಮುಖಂಡರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಶೈಲೇಂದ್ರ ಸಿಂಗ್ ಮತ್ತು ರಾಜೇಶ್ ಸಿಂಗ್ ರಾಜೀನಾಮೆ ನೀಡಿದ ಮುಖಂಡರು. ಭಾನುವಾರ ತಮ್ಮ ರಾಜೀನಾಮೆ ಪತ್ರವನ್ನು ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿ (ಯುಪಿಸಿಸಿ) ಅಧ್ಯಕ್ಷ ಅಜಯ್ ಕುಮಾರ್ ಲಲ್ಲು ಅವರಿಗೆ ಕಳುಹಿಸಿದ್ದಾರೆ.
ಲಲ್ಲು ಅವರು ಯುಪಿಸಿಸಿ ಅಧ್ಯಕ್ಷರಾದ ಬಳಿಕ ನಿಷ್ಠಾವಂತ ಮತ್ತು ಹಳೆಯ ನಾಯಕರನ್ನು ಕಡೆಗಣಿಸಿದ್ದಾರೆ. ಹೀಗಾಗಿ, ಪಕ್ಷ ತ್ಯಜಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಈ ನಾಯಕರು ದೂರಿದ್ದಾರೆ.
ಪಕ್ಷದ ಪರಿಸ್ಥಿತಿ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರಿಗೂ ತಿಳಿಸಲಾಗಿದೆ. ಆದರೆ, ಅವರು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಶೈಲೇಂದ್ರ ಸಿಂಗ್ ತಿಳಿಸಿದ್ದಾರೆ.
ಈ ನಾಯಕರ ಆರೋಪಗಳು ಆಧಾರರಹಿತವಾಗಿವೆ ಎಂದು ಪಕ್ಷದ ರಾಜ್ಯ ಘಟಕದ ಕಾರ್ಯದರ್ಶಿ ರಾಘವೇಂದ್ರ ಪ್ರತಾಪ್ ತಿಳಿಸಿದ್ದಾರೆ.