ತಿರುವನಂತಪುರ: ಕೇರಳದಲ್ಲಿ ಮತ್ತೆ ಎರಡು ಝಿಕಾ ವೈರಸ್ ಪ್ರಕರಣಗಳು ಕಂಡುಬಂದಿದ್ದು, ಇದುವರೆಗೆ ಸೋಂಕಿತರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಶುಕ್ರವಾರ ತಿಳಿಸಿದ್ದಾರೆ.
ತಿರುವನಂತಪುರ ಜಿಲ್ಲೆಯ ವೈದ್ಯಕೀಯ ಕಾಲೇಜಿನ ವೈರಾಲಜಿ ಪ್ರಯೋಗಾಲಯದಲ್ಲಿ ನಡೆಸಿದ ಪರೀಕ್ಷೆಯಲ್ಲಿ ಇಬ್ಬರಿಗೆ ಝಿಕಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ಝಿಕಾ ವೈರಸ್ ಹರಡುವುದನ್ನು ಸಮರ್ಪಕವಾಗಿ ನಿಭಾಯಿಸಲು ಆರೋಗ್ಯ ಸಚಿವೆ ಹಾಗೂ ಕಂದಾಯ ಸಚಿವ ಕೆ. ಬಾಲನ್ ನೇತೃತ್ವದಲ್ಲಿ ಸಭೆ ನಡೆಯಿತು. ಶುಚಿತ್ವಕ್ಕಾಗಿ ವಾರ್ಡ್ ಮಟ್ಟದಲ್ಲಿ ಸಮಿತಿ ಬಲಪಡಿಸಲು ತೀರ್ಮಾನಿಸಲಾಯಿತು.
ಕೇರಳದಲ್ಲಿ ಮಳೆಯಾಗುತ್ತಿದ್ದು, ಝಿಕಾ ಜೊತೆಗೆ ಡೆಂಗಿ ಪ್ರಕರಣಗಳು ವರದಿಯಾಗುತ್ತಿವೆ. ಹಾಗಾಗಿ ಎಲ್ಲ ಸಾಂಕ್ರಾಮಿಕ ರೋಗಗಳನ್ನು ನಿಭಾಯಿಸಲು ಇಲಾಖೆಗಳು ಒಗ್ಗಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ ಎಂಬ ಅಭಿಪ್ರಾಯ ಮೂಡಿಬಂದಿದೆ.
ವೈದ್ಯಕೀಯ ಮೂಲಸೌಕರ್ಯಗಳ ವರ್ಧನೆ, ಸೊಳ್ಳೆಗಳ ನಿರ್ಮೂಲನೆಗೆ ಆದ್ಯತೆ ನೀಡಲಾಗಿದೆ. ಸ್ವಯಂಸೇವಾ ಸಂಸ್ಥೆಗಳ ಮೂಲಕ ಜನಜಾಗೃತಿ ಮೂಡಿಸಲು ನಿರ್ಧಾರ ಕೈಗೊಳ್ಳಲಾಗಿದೆ.
ಕೋವಿಡ್-19 ನಿಯಂತ್ರಿಸಲು ಆದಷ್ಟು ಬೇಗನೇ ಲಸಿಕೆ ವಿತರಿಸಲು ಆದ್ಯತೆ ನೀಡಲು ಸೂಚಿಸಲಾಗಿದೆ.