ಉದಯಪುರದಲ್ಲಿ ಟೈಲರ್ ಹತ್ಯೆ: ಬೆದರಿಕೆ ಕರೆ ದೂರು ನಿರ್ಲಕ್ಷಿಸಿದ್ದ ಎಎಸ್ಐ ಅಮಾನತು

ಜೈಪುರ: ಟೈಲರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ಆರೋಪದಡಿ ಉದಯಪುರದ ಧನ್ ಮಂಡಿ ಪೊಲೀಸ್ ಠಾಣೆಯ ಎಎಸ್ಐ ಒಬ್ಬರನ್ನು ಅಮಾನತು ಮಾಡಲಾಗಿದೆ.
ಮಂಗಳವಾರ ಮಧ್ಯಾಹ್ನ ಇಬ್ಬರು ದುಷ್ಕರ್ಮಿಗಳು ಧನ್ ಮಂಡಿ ಪ್ರದೇಶದ ಟೈಲರ್ ಕನ್ಹಯ್ಯ ಲಾಲ್ ಅವರನ್ನು ಕತ್ತು ಸೀಳಿ ಕೊಲೆ ಮಾಡಿದ್ದರು. ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಿಬಿಟ್ಟಿದ್ದ ದುಷ್ಕರ್ಮಿಗಳು, ಇಸ್ಲಾಂ ಧರ್ಮ ಮತ್ತು ಪ್ರವಾದಿ ಮಹಮ್ಮದ್ ಅವರಿಗೆ ಅಪಮಾನ ಮಾಡಿದ್ದಕ್ಕಾಗಿ ಸೇಡು ತೀರಿಸಿಕೊಳ್ಳುತ್ತಿದ್ದೇವೆ. ಪ್ರಧಾನಿ ಮೋದಿಯನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಘಟನೆ ಬಳಿಕ ಉದಯಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಕರ್ಫ್ಯೂ ವಿಧಿಸಲಾಗಿದೆ.
ಜಾಮೀನಿನ ಬಳಿಕ ಬೆದರಿಕೆ
ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಜೂನ್ 11 ರಂದು ಕನ್ಹಯ್ಯ ಲಾಲ್ ವಿರುದ್ಧ ಎಫ್ಐಆರ್ ದಾಖಲಿಸಿ ಅವರನ್ನು ಬಂಧಿಸಲಾಗಿತ್ತು ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಹವಾ ಸಿಂಗ್ ಘುಮಾರಿಯಾ ಹೇಳಿದ್ದಾರೆ.
ಜೂನ್ 15ರಂದು ಕನ್ಹಯ್ಯ ಜಾಮೀನಿನ ಮೇಲೆ ಹೊರಬಂದ ಬಳಿಕ ತಮಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಪೊಲೀಸರಿಗೆ ತಿಳಿಸಿದ್ದರು. ಬಳಿಕ, ಸ್ಥಳೀಯ ಠಾಣಾಧಿಕಾರಿ ಅವರು, ದೂರುದಾರರು ಮತ್ತು ಎರಡೂ ಸಮುದಾಯದ ಕೆಲವರನ್ನು ಠಾಣೆಗೆ ಕರೆಸಿ ವಿಷಯ ಇತ್ಯರ್ಥಪಡಿಸಿದ್ದರು.
ಆದರೆ, ನಿನ್ನೆ ದುಷ್ಕರ್ಮಿಗಳು ಕನ್ಹಯ್ಯನ ಹತ್ಯೆ ಮಾಡಿದ್ದು, ಧನ್ ಮಂಡಿ ಪೊಲೀಸ್ ಠಾಣೆಯಲ್ಲಿ ನಿಯೋಜನೆಗೊಂಡಿದ್ದ ಎಎಸ್ಐ ಭನ್ವರ್ ಲಾಲ್ ಅವರನ್ನು ನಿರ್ಲಕ್ಷ್ಯದ ಆರೋಪದ ಮೇಲೆ ಅಮಾನತುಗೊಳಿಸಲಾಗಿದೆ ಎಂದು ಉದಯಪುರದ ಪೊಲೀಸ್ ಮಹಾನಿರೀಕ್ಷಕ ಹಿಂಗ್ಲಾಜ್ ಡಾನ್ ತಿಳಿಸಿದ್ದಾರೆ.
ತಮಗೆ ಬರುತ್ತಿರುವ ಬೆದರಿಕೆ ಕರೆಗಳ ಬಗ್ಗೆ ಕನ್ಹಯ್ಯ ಲಾಲ್ ನೀಡಿದ್ದ ದೂರನ್ನು ಎಎಸ್ಐ ಗಂಭೀರವಾಗಿ ಪರಿಗಣಿಸಿರಲಿಲ್ಲ ಎಂದು ಆರೋಪಿಸಲಾಗಿದೆ.
ಮಧ್ಯಸ್ಥಿಕೆ ವಹಿಸಿದ್ದವರನ್ನೂ ವಿಚಾರಣೆ ನಡೆಸಲಾಗುತ್ತಿದೆ ಎಂದು ಎಡಿಜಿ ತಿಳಿಸಿದ್ದಾರೆ.
ಇವನ್ನೂ ಓದಿ..
ರಾಜಸ್ಥಾನ: ನೂಪುರ್ ಬೆಂಬಲಿಸಿ ಪೋಸ್ಟ್ ಮಾಡಿದ್ದ ವ್ಯಕ್ತಿಯ ಹತ್ಯೆ, ಇಬ್ಬರ ಬಂಧನ
ರಾಜಸ್ಥಾನ: ಭೀಕರ ಹತ್ಯೆ ಬಳಿಕ ಭುಗಿಲೆದ್ದ ಪ್ರತಿಭಟನೆ, ಇಂಟರ್ನೆಟ್ ಸೇವೆ ಸ್ಥಗಿತ
ನೂಪುರ್ ಪರ ಪೋಸ್ಟ್: ರಾಜಸ್ಥಾನದಲ್ಲಿ ವ್ಯಕ್ತಿಯ ಶಿರಚ್ಛೇದ, ಪ್ರಧಾನಿಗೂ ಬೆದರಿಕೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.