ಜೈಪುರ: ಕೇಂದ್ರದ ಕೃಷಿ ಖಾತೆ ರಾಜ್ಯ ಸಚಿವ ಕೈಲಾಸ್ ಚೌಧರಿ ಅವರಿಗೆ ಕೋವಿಡ್–19 ದೃಢಪಟ್ಟಿದೆ. ಈ ವಿಷಯವನ್ನು ಶನಿವಾರ ಅವರೇ ಬಹಿರಂಗಪಡಿಸಿದ್ದಾರೆ.
‘ಕೊರೊನಾ ಲಕ್ಷಣ ಕಾಣಿಸಿಕೊಂಡಿದ್ದರಿಂದ ಶುಕ್ರವಾರ ರಾತ್ರಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡೆ. ಅದರ ವರದಿ ಬಂದಿದ್ದು, ನನಗೆ ಸೋಂಕು ತಗುಲಿರುವುದು ಖಾತರಿಯಾಗಿದೆ. ಚಿಕಿತ್ಸೆಗಾಗಿ ಜೋಧಪುರದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದೇನೆ’ ಎಂದು ಚೌಧರಿ ಟ್ವೀಟ್ ಮಾಡಿದ್ದಾರೆ.
‘ನನ್ನ ಜೊತೆ ಸಂಪರ್ಕಕ್ಕೆ ಬಂದಿದ್ದ ಎಲ್ಲರೂ ತಮ್ಮ ಕುಟುಂಬದ ಸದಸ್ಯರಿಂದ ಅಂತರ ಕಾಯ್ದುಕೊಳ್ಳಬೇಕು. ಆದಷ್ಟು ಬೇಗನೆ ಕೋವಿಡ್ ಪರೀಕ್ಷೆಗೆ ಒಳಗಾಗಬೇಕು’ ಎಂದು ಅವರು ಹೇಳಿದ್ದಾರೆ.
ಬಾರ್ಮೆರ್-ಜೈಸಲ್ಮೇರ್ ಲೋಕಸಭಾ ಕ್ಷೇತ್ರದ ಸದಸ್ಯರಾಗಿರುವ ಚೌಧರಿ, ತಮ್ಮ ಮೂರು ದಿನಗಳ ಜೈಸಲ್ಮೇರ್ ಪ್ರವಾಸದ ವೇಳೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿದ್ದರು.