ಲಖನೌ: ಪ್ರಮುಖ ಬೆಳವಣಿಗೆಯೊಂದರಲ್ಲಿ ಸಮಾಜವಾದಿ ಪಕ್ಷದ (ಎಸ್ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಹಾಗೂ ಅವರ ಚಿಕ್ಕಪ್ಪ ಶಿವಪಾಲ್ ಸಿಂಗ್ ಯಾದವ್ ವಿರುದ್ಧ ಕಣಕ್ಕಿಳಿಸಲಾಗಿದ್ದ ಅಭ್ಯರ್ಥಿಗಳನ್ನು ಕಾಂಗ್ರೆಸ್ ಹಿಂತೆಗೆದುಕೊಂಡಿದೆ.
ಮೈನ್ಪುರಿಯ ಕರ್ಹಾಲ್ ಹಾಗೂ ಇಟಾವಾದ ಜಸ್ವಂತ್ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿದಿದ್ದಾರೆ.
ಈ ಎರಡೂ ಕ್ಷೇತ್ರಗಳಲ್ಲಿ ಮೂರನೇ ಹಂತದಲ್ಲಿ ಫೆಬ್ರುವರಿ 20ರಂದು ಚುನಾವಣೆ ನಡೆಯಲಿದೆ.
ಅಖಿಲೇಶ್ ಯಾದವ್ ಅವರು ಕರ್ಹಾಲ್ನಿಂದ ಸ್ಪರ್ಧಿಸುತ್ತಿದ್ದು, ಶಿವಪಾಲ್ ಅವರು ಜಸ್ವಂತ್ನಗರದಿಂದ ಕಣಕ್ಕಿಳಿದಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಅಮೇಥಿ ಮತ್ತು ರಾಯ್ ಬರೇಲಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ವಿರುದ್ಧ ಸಮಾಜವಾದಿ ಪಕ್ಷವು ಅಭ್ಯರ್ಥಿಗಳನ್ನು ಕಣಕ್ಕಿಳಿಸಿರಲಿಲ್ಲ.
ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಅವರು (ಸಮಾಜವಾದಿ ಪಕ್ಷ) ಅಭ್ಯರ್ಥಿಗಳನ್ನು ಕಣಕ್ಕಿಳಿಸಿರಲಿಲ್ಲ. ಹೀಗಾಗಿ ನಾವೂ ಸಹ ಅದಕ್ಕೆ ತಕ್ಕಂತೆ ನಡೆದುಕೊಳ್ಳುತ್ತಿದ್ದೇವೆ ಎಂದು ಕಾಂಗ್ರೆಸ್ನ ಉತ್ತರ ಪ್ರದೇಶ ಘಟಕದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಪ್ರಧಾನ್ ತಿಳಿಸಿದ್ದಾರೆ. ಸಮಾಜವಾದಿ ಪಕ್ಷದ ವಕ್ತಾರ ರಾಜೇಂದ್ರ ಚೌಧರಿ ಕೂಡ ಇದನ್ನು ಖಚಿತಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಎಸ್.ಪಿ.ಸಿಂಗ್ ಬಘೇಲ್, ‘ಇದರಲ್ಲಿ ಅಚ್ಚರಿಯೇನೂ ಇಲ್ಲ. ಎಸ್ಪಿ ಹಾಗೂ ಕಾಂಗ್ರೆಸ್ ಕೈಜೋಡಿಸಿವೆ ಅಷ್ಟೆ. ಆದರೆ, ನಾವು ಚುನಾವಣೆಯಲ್ಲಿ ಗೆಲ್ಲುವುದು ಖಚಿತ’ ಎಂದು ಹೇಳಿದ್ದಾರೆ.