ಲಖನೌ: ಕೊರೊನಾ ಸೋಂಕಿನ ಕಾಲದಲ್ಲಿ ದಣಿವರಿಯದೇ ದುಡಿಯುತ್ತಾ, ಸಮಾಜಕ್ಕೆ ಕೊಡುಗೆ ನೀಡುತ್ತಿರುವ ಪತ್ರಕರ್ತರನ್ನು ಗೌರವಿಸುವ, ಪ್ರೋತ್ಸಾಹಿಸುವ ದೃಷ್ಟಿಯಿಂದ, ಕೋವಿಡ್ನಿಂದ ಮೃತಪಟ್ಟ ಪತ್ರಕರ್ತರ ಕುಟುಂಬ ಸದಸ್ಯರಿಗೆ ₹10 ಲಕ್ಷ ಪರಿಹಾರ ಹಣ ನೀಡುವುದಾಗಿ ಮುಖ್ಯಮಂತ್ರಿಯೋಗಿ ಆದಿತ್ಯನಾಥ್ ಪ್ರಕಟಿಸಿದ್ದಾರೆ.
'ಹಿಂದಿ ಪತ್ರಿಕೋದ್ಯಮ ದಿನಾಚರಣೆಯ' ಸಂದರ್ಭದಲ್ಲಿ ಈ ವಿಷಯ ತಿಳಿಸಿದ ಅವರು, ‘ಸ್ವಾತಂತ್ರ್ಯ ಚಳವಳಿಯಿಂದ ಇಂದಿನವರೆಗೆ ಹಿಂದಿ ಪತ್ರಿಕೋದ್ಯಮವು ಸಾಮಾಜಿಕ ಜಾಗೃತಿ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಮಹತ್ವದ ಕೊಡುಗೆ ನೀಡಿದೆಳು‘ ಎಂದು ಹೇಳಿದರು.
ಪತ್ರಕರ್ತರಿಗೆ ಎಲ್ಲ ಸಹಕಾರ ನೀಡಲು ಸರ್ಕಾರ ಬದ್ಧವಾಗಿದೆ ಮತ್ತು ಅವರನ್ನು ಪ್ರೋತ್ಸಾಹಿಸುವುದನ್ನು ಮುಂದುವರಿಸುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದರು.
ಕೋವಿಡ್ ಅವಧಿಯಲ್ಲಿನ ಪತ್ರಕರ್ತರ ಸೇವೆಯನ್ನು ಶ್ಲಾಘಿಸಿದ ಅವರು, ‘ಇಂತಹ ಸವಾಲಿನ ಕಾಲದಲ್ಲಿ, ಎಲ್ಲಾ ಪತ್ರಕರ್ತರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಕೋವಿಡ್ಗೆ ಸಂಬಂಧಿಸಿದ ಅಧಿಕೃತ ಮಾಹಿತಿಯನ್ನು ತಲುಪಿಸುತ್ತಿದ್ದಾರೆ. ಅವರು 24x7 ಕೆಲಸ ಮಾಡುತ್ತಿದ್ದಾರೆ. ಇದು ಶ್ಲಾಘನೀಯ‘ ಎಂದು ಹೇಳಿದರು.
‘ಕೋವಿಡ್ ಸಾಂಕ್ರಾಮಿಕ ರೋಗದ ಎರಡನೇ ಅಲೆಯ ಸಮಯದಲ್ಲಿ, ದೇಶಾದ್ಯಂತ ಅನೇಕ ಪತ್ರಕರ್ತರು ಕರ್ತವ್ಯದ ವೇಳೆ ಪ್ರಾಣ ಕಳೆದುಕೊಂಡಿದ್ದಾರೆ. ಅವರ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ‘ ಎಂದು ಉತ್ತರ ಪ್ರದೇಶ ಸರ್ಕಾರ ತಿಳಿಸಿದೆ.