ಲಕ್ನೋ: ರಾಜ್ಯ ಪೊಲೀಸ್ ಇಲಾಖೆಯ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ತನಿಖೆ ನಡೆಸುತ್ತಿರುವ ಪ್ರಕರಣಗಳಿಗೆ ಕಾನೂನು ಕ್ರಮ ಜರುಗಿಸುವ ಮೊದಲು ಸ್ವತಂತ್ರ ಪರಿಶೀಲನೆ ನಡೆಸಲು ಉತ್ತರ ಪ್ರದೇಶ ಸರ್ಕಾರ ಪ್ರಾಧಿಕಾರವನ್ನು ರಚಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಈ ಪ್ರಾಧಿಕಾರದಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರು ಮತ್ತು ನಿವೃತ್ತ ಪ್ರಧಾನ ಕಾರ್ಯದರ್ಶಿ (ಕಾನೂನು) ಸದಸ್ಯರಾಗಿರುತ್ತಾರೆ.
‘ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ 1967ರ ಅಡಿಯಲ್ಲಿ ರಾಜ್ಯದಲ್ಲಿ ದಾಖಲಾದ ಪ್ರಕರಣಗಳು ಮತ್ತು ಸಾಕ್ಷ್ಯಗಳನ್ನು ಪರಿಶೀಲಿಸಲು ರಾಜ್ಯ ಸರ್ಕಾರ ಇಬ್ಬರು ಸದಸ್ಯರ ಪ್ರಾಧಿಕಾರ ರಚಿಸಿದೆ’ ಎಂದು ಗೃಹ ಕಾರ್ಯದರ್ಶಿ ಬಿ.ಡಿ. ಪಾಲ್ಸನ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
‘ಈ ಪ್ರಾಧಿಕಾರವು ಒಂದು ವರ್ಷದವರೆಗೆ ಕಾರ್ಯನಿರ್ವಹಿಸಲಿದೆ. ಈ ಸಮಿತಿ ಯುಎಪಿಎ ಅಡಿಯಲ್ಲಿ ದಾಖಲಾದ ಪ್ರಕರಣಗಳ ವಿಚಾರಣೆ ನಡೆಸಿ, ಕಾನೂನು ಕ್ರಮ ಜರುಗಿಸಲು ಸರ್ಕಾರಕ್ಕೆ ಶಿಫಾರಸುಗಳನ್ನು ಮಾಡಲಿದೆ’ ಎಂದು ಅವರು ಹೇಳಿದರು.