ಲಖನೌ: ಉತ್ತರ ಪ್ರದೇಶದಲ್ಲಿ ಒಂಬತ್ತು ವರ್ಷಗಳ ಹಿಂದೆ ನಡೆದ ಲೋಕಸಭಾ ಚುನಾವಣೆ ವೇಳೆ ಸಮಾಜವಾದಿ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಂದಗೋಪಾಲ್ ಗುಪ್ತಾ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
ಪ್ರಯಾಗ್ರಾಜ್ ಶಾಸಕ/ಸಂಸದರ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ದಿನೇಶ್ ಚಂದ್ರ ಶುಕ್ಲಾ ಅವರು ಸಚಿವ ಗುಪ್ತಾ ಅವರಿಗೆ ಈ ಶಿಕ್ಷೆ ವಿಧಿಸಿದ್ದಲ್ಲದೆ, ₹ 10 ಸಾವಿರ ದಂಡವನ್ನೂ ವಿಧಿಸಿದರು. ಆದರೆ ನ್ಯಾಯಾಲಯ ಇದೇ ವೇಳೆ ಜಾಮೀನು ನೀಡಿದ್ದು, ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವುದಾಗಿ ಗುಪ್ತಾ ತಿಳಿಸಿದರು.
ಗುಪ್ತಾ ಅವರು ಆಗ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದರು. 2014 ಎಸ್ಪಿ ಕಾರ್ಯಕರ್ತರ ಮೇಲಿನ ದಾಳಿಯ ನೇತೃತ್ವ ವಹಿಸಿದ್ದ ಆರೋಪದ ಮೇಲೆ ಮುತ್ತಿಗಂಜ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು.
ಕೆಲವು ತಿಂಗಳ ಹಿಂದೆ ಉತ್ತರ ಪ್ರದೇಶದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವ ರಾಕೇಶ್ ಸಚನ್ ಅವರು ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಒಂದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದರು. ಈ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ನಂತರ ಸಚನ್ ನ್ಯಾಯಾಲಯದಿಂದ ಪಲಾಯನ ಮಾಡಿ ಬಳಿಕ ನ್ಯಾಯಾಲಯಕ್ಕೆ ಶರಣಾಗಿದ್ದರು.