ಕೋಲ್ಕತ್ತ: ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ತಪ್ಪಿತಸ್ಥರಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿರುವುದನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖಂಡಿಸಿದ್ದಾರೆ. ಸಾಂವಿಧಾನಿಕ ಪ್ರಜಾಪ್ರಭುತ್ವದ ಹೊಸ ಕುಸಿತಕ್ಕೆ ದೇಶವು ಸಾಕ್ಷಿಯಾಗಿದೆ ಎಂದು ಟೀಕಿಸಿದ್ದಾರೆ.
ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮುಖ್ಯಸ್ಥೆಯೂ ಆಗಿರುವ ಮಮತಾ, ಹೇಳಿಕೆಗಳನ್ನು ನೀಡಿದ ಕಾರಣಗಳಿಗಾಗಿ ವಿರೋಧ ಪಕ್ಷಗಳ ನಾಯಕರು ಅನರ್ಹರಾಗುತ್ತಾರೆ ಎಂದು ಹೇಳಿದ್ದಾರೆ.
ಮೋದಿ ಉಪನಾಮ ಕುರಿತಂತೆ 2019ರಲ್ಲಿ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ರಾಹುಲ್ ಗಾಂಧಿ ತಪ್ಪಿತಸ್ಥರು ಎಂದು ಸೂರತ್ ನ್ಯಾಯಾಲಯ ಗುರುವಾರವಷ್ಟೇ ತೀರ್ಪು ನೀಡಿತ್ತು. ಇದರ ಬೆನ್ನಲ್ಲೇ ಇಂದು (ಶುಕ್ರವಾರ) ಲೋಕಸಭೆ ಕಾರ್ಯದರ್ಶಿ ಅವರು, ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, 'ಪ್ರಧಾನಿ ನರೇಂದ್ರ ಮೋದಿ ಅವರ ಹೊಸ ಭಾರತದಲ್ಲಿ ವಿರೋಧ ಪಕ್ಷಗಳ ನಾಯಕರು ಬಿಜೆಪಿಯ ಮುಖ್ಯ ಗುರಿಯಾಗಿದ್ದಾರೆ! ಕ್ರಿಮಿನಲ್ ಹಿನ್ನಲೆಯ ಬಿಜೆಪಿ ನಾಯಕರು ಕ್ಯಾಬಿನೆಟ್ಗೆ ಸೇರುತ್ತಿರುವ ಸಂದರ್ಭದಲ್ಲಿ, ವಿರೋಧ ಪಕ್ಷಗಳ ನಾಯಕರನ್ನು ಅವರ ಹೇಳಿಕೆಗಳಿಗಾಗಿ ಅನರ್ಹಗೊಳಿಸಲಾಗುತ್ತದೆ' ಎಂದಿದ್ದಾರೆ.
ಮುಂದುವರಿದು, 'ನಮ್ಮ ಸಾಂವಿಧಾನಿಕ ಪ್ರಜಾಪ್ರಭುತ್ವದ ಹೊಸ ಕುಸಿತಕ್ಕೆ ನಾವೆಲ್ಲರೂ ಸಾಕ್ಷಿಯಾಗುತ್ತಿದ್ದೇವೆ' ಎಂದೂ ಬೇಸರ ವ್ಯಕ್ತಪಡಿಸಿದ್ದಾರೆ.
In PM Modi’s New India, Opposition leaders have become the prime target of BJP!
— Mamata Banerjee (@MamataOfficial) March 24, 2023
While BJP leaders with criminal antecedents are inducted into the cabinet, Opposition leaders are disqualified for their speeches.
Today, we have witnessed a new low for our constitutional democracy
2019ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದ ಕೋಲಾರದಲ್ಲಿ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ರಾಹುಲ್, 'ಕಳ್ಳರೆಲ್ಲರಿಗೂ ಸಾಮಾನ್ಯವಾಗಿ ಮೋದಿ ಎಂಬ ಉಪನಾಮವೇ ಏಕಿರುತ್ತದೆ' ಎಂದು ಪ್ರಶ್ನಿಸಿದ್ದರು. ಈ ಹೇಳಿಕೆ ಮೂಲಕ ರಾಹುಲ್ ಅವರು ಮೋದಿ ಉಪನಾಮ ಹೊಂದಿರುವವರನ್ನೆಲ್ಲಾ ಹೀಯಾಳಿಸಿದ್ದಾರೆ ಎಂದು ಆರೋಪಿಸಿದ್ದ ಗುಜರಾತ್ನ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಸೂರತ್ ನ್ಯಾಯಾಲಯವು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ತಪ್ಪಿತಸ್ಥರು ಎಂದಿದೆ. ಈ ಸಂಬಂಧ 2 ವರ್ಷ ಜೈಲು ಹಾಗೂ ದಂಡ ಪಾವತಿಯ ಶಿಕ್ಷೆ ವಿಧಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.