ಭುವನೇಶ್ವರ: ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಬಂಧನದಲ್ಲಿರುವ ಕೈಗಾರಿಕೆ ಹಾಗೂ ವಾಣಿಜ್ಯ ಸಚಿವ ಪಾರ್ಥ ಚಟರ್ಜಿ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿಕೊಳ್ಳುವ ಅಗತ್ಯವಿಲ್ಲ ಎಂದು ಏಮ್ಸ್ ಆಸ್ಪತ್ರೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಚಟರ್ಜಿ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು (ಇ.ಡಿ) ಸೋಮವಾರ ಬೆಳಿಗ್ಗೆ ವೈದ್ಯಕೀಯ ಪರೀಕ್ಷೆಗಾಗಿ ಭುವನೇಶ್ವರಕ್ಕೆ ಕರೆದೊಯ್ದಿದ್ದಾರೆ.
ಚಟರ್ಜಿ ಅವರನ್ನು ಸಂಪೂರ್ಣ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದೇವೆ. ಅವರು ದೀರ್ಘಕಾಲೀನ ಕೆಲವು ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಆದರೆ, ತಕ್ಷಣವೇ ಆಸ್ಪತ್ರೆಗೆ ದಾಖಲಿಸಿಕೊಳ್ಳಬೇಕಿಲ್ಲ ಎಂದು ಏಮ್ಸ್ ಕಾರ್ಯನಿರ್ವಾಹಕ ನಿರ್ದೇಶಕ ಆಶುತೋಷ್ ವಿಶ್ವಾಸ್ ತಿಳಿಸಿದ್ದಾರೆ.
ಚಟರ್ಜಿ ಅವರ ಆರೋಗ್ಯದ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.
ಕಲ್ಕತ್ತ ಹೈಕೋರ್ಟ್ ನಿರ್ದೇಶನದ ಮೇರೆಗೆ ಇ.ಡಿ ಅಧಿಕಾರಿಗಳು ಪಾರ್ಥ ಚಟರ್ಜಿ ಅವರನ್ನು ಬೆಳಿಗ್ಗೆ 9ರ ಸುಮಾರಿಗೆ ಕೋಲ್ಕತ್ತ ವಿಮಾನ ನಿಲ್ದಾಣದಿಂದ ಭುವನೇಶ್ವರಕ್ಕೆ ಏರ್ ಆಂಬುಲೆನ್ಸ್ ಮೂಲಕ ಕರೆದೊಯ್ದಿದ್ದರು. ಬಳಿಕ ಅವರ ಆರೋಗ್ಯ ಪರೀಕ್ಷಿಸಲಾಗಿತ್ತು.