ಚಂಡೀಗಡ: ಅನೇಕ ಕಾಂಗ್ರೆಸ್ ನಾಯಕರು ತಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಪಂಜಾಬ್ನ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಬುಧವಾರ ಹೇಳಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ತಮ್ಮ ಮೊದಲ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು.
‘ನಾನೊಂದು ಹೊಸ ಪಕ್ಷವನ್ನು ಕಟ್ಟುತ್ತಿದ್ದು ಈಗಲೇ ಹೆಸರು ಹೇಳಲು ಸಾಧ್ಯವಿಲ್ಲ. ಚುನಾವಣಾ ಆಯೋಗವು ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಅನುಮೋದಿಸಿದ ನಂತರವಷ್ಟೆ ಹೇಳಬಲ್ಲೆ. ಅದಕ್ಕಾಗಿ ನಾವು ಕಾಯೋಣ’ ಎಂದು ಅವರು ಹೇಳಿದರು.
ಕೇಂದ್ರದ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರ ಸಮಸ್ಯೆಗಳನ್ನು ಪರಿಹರಿಸುವ ಪ್ರಯತ್ನವನ್ನು ಮುಂದುವರಿಸಲು ತಾವು ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುವುದಾಗಿ ಇದೇ ವೇಳೆ ಅವರು ಹೇಳಿದರು.
ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರೊಂದಿಗಿನ ತೀವ್ರ ಸಂಘರ್ಷದ ನಡುವೆ ಸಿಂಗ್ ಅವರು ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಿಂಗ್ ಅವರು, ಕಾಂಗ್ರೆಸ್ನ ಅನೇಕ ನಾಯಕರು ತಮ್ಮ ಸಂಪರ್ಕದಲ್ಲಿದ್ದಾರೆ. ಸಮಯ ಬಂದಾಗ ಅವರು ಅಲ್ಲಿಂದ ಬಹಿರಂಗವಾಗಿಯೇ ಹೊರಬರುತ್ತಾರೆ ಎಂದು ಹೇಳಿದರು.
ಕಾಂಗ್ರೆಸ್ಗೆ ಇನ್ನೂ ರಾಜೀನಾಮೆ ನೀಡದಿರುವ ಬಗ್ಗೆ ಉತ್ತರಿಸಿದ ಅವರು, ‘ನಾನು ಕಾಂಗ್ರೆಸ್ನಲ್ಲಿ 50 ವರ್ಷ ಕಳೆದಿದ್ದೇನೆ. ಇನ್ನೂ 10 ದಿನ ಉಳಿಯುವುದರಿಂದ ಯಾವ ವ್ಯತ್ಯಾಸವಾಗುತ್ತದೆ? ಎಂದು ಪ್ರಶ್ನಿಸಿದರು.
ಮುಂದಿನ ವರ್ಷದ ಆರಂಭದಲ್ಲಿ ಪಂಜಾಬ್ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.