ಅಹಮದಾಬಾದ್: ಗುಜರಾತ್ ವಿಧಾನಸಭೆ ಎರಡನೇ ಹಂತದ ಚುನಾವಣೆ ಸಜ್ಜಾಗಿರುವಂತೆಯೇ ಕಾಂಗ್ರೆಸ್ ಮುಕ್ತ ಗುಜರಾತ್ ನಿರ್ಮಾಣಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕರೆ ನೀಡಿದ್ದಾರೆ.
ಉತ್ತರ ಪ್ರದೇಶವನ್ನು ಮಾದರಿಯಾಗಿ ಬಿಂಬಿಸಿರುವ ಆದಿತ್ಯನಾಥ್, ಗುಜರಾತ್ನಲ್ಲಿ ಕಾಂಗ್ರೆಸ್ ಅನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವಂತೆ ಕರೆ ನೀಡಿದ್ದು, ಈ ಮೂಲಕ ಎಲ್ಲ ಸಮಸ್ಯೆಗಳನ್ನು ನಿವಾರಿಸಬಹುದು ಎಂದು ಹೇಳಿದರು.
ಗುಜರಾತ್ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಪ್ರಚಾರಕ್ಕೆ ಇಂದು ತೆರೆ ಬಿದ್ದಿದೆ. ಇದರಂತೆ ಆನಂದ್ ಜಿಲ್ಲೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ ಅವರು, ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷಗಳು ದೇಶದ ಭದ್ರತೆಗೆ ಬೆದರಿಕೆಯಾಗಿದ್ದು, ಅಭಿವೃದ್ಧಿಗೆ ತೊಡಕಾಗಿವೆ ಎಂದು ಆರೋಪಿಸಿದರು.
ಭಾರತಕ್ಕೆ ಸ್ವಾತಂತ್ರ್ಯ ದೊರಕಿದ ಮೇಲೆ ಕಾಂಗ್ರೆಸ್ ಪಕ್ಷವನ್ನು ವಿಸರ್ಜಿಸಬೇಕೆಂದು ಮಹಾತ್ಮ ಗಾಂಧಿ ಒಮ್ಮೆ ಹೇಳಿದ್ದರು. ಇದು ನಿಮ್ಮ ಜವಾಬ್ದಾರಿಯಾಗಿದ್ದು, ಕಾಂಗ್ರೆಸ್ ಮುಕ್ತ ಭಾರತದಿಂದ ಎಲ್ಲ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದು ಹೇಳಿದರು.
ಅಯೋಧ್ಯೆಯಲ್ಲಿ ರಾಮಮಂದಿರ ಮತ್ತು ಗುಜರಾತ್ನಲ್ಲಿ ಸೋಮನಾಥ ದೇಗುಲ ನಿರ್ಮಾಣಕ್ಕೆ ಕಾಂಗ್ರೆಸ್ ಅಡ್ಡಿಪಡಿಸುತ್ತಿದೆ ಎಂದು ದೂರಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಗುಜರಾತ್ ಕರ್ಫ್ಯೂ, ಗಲಭೆ ಮುಕ್ತವಾಗಿದ್ದು, ಭಯೋತ್ಪಾದನೆ, ನಕ್ಸಲ್ ಮತ್ತು ಪ್ರತ್ಯೇಕತಾವಾದವನ್ನು ತೊಡೆದು ಹಾಕಿದೆ ಎಂದು ಹೇಳಿದರು.