ಲಖನೌ: ಫೋಟೊಗೆ ಪೋಸ್ ನೀಡಲು, ರಾಜಕೀಯ ಲಾಭಕ್ಕೋಸ್ಕರ ಪ್ರತಿಪಕ್ಷಗಳ ನಾಯಕರು ಲಖಿಂಪುರ ಖೇರಿಗೆ ಭೇಟಿ ನೀಡುತ್ತಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟೀಕಿಸಿದ್ದಾರೆ.
ಕಾಂಗ್ರೆಸ್ ನಾಯಕರು ಲಖಿಂಪುರ ಖೇರಿಗೆ ಭೇಟಿ ನೀಡಿರುವುದು ನಾಚಿಕೆಗೇಡಿನ ಸಂಗತಿ. ಛತ್ತೀಸಗಡ ಹೊತ್ತಿ ಉರಿಯುತ್ತಿರುವಾಗ ಅಲ್ಲಿನ ಮುಖ್ಯಮಂತ್ರಿ ಭೂಪೇಶ್ ಬಘೆಲ್ ಉತ್ತರ ಪ್ರದೇಶದಲ್ಲಿದ್ದಾರೆ ಎಂದು ಯೋಗಿ ಹೇಳಿದ್ದಾರೆ.
ಉತ್ತರ ಪ್ರದೇಶ ಸರ್ಕಾರವು ಏನನ್ನೂ ಮುಚ್ಚಿಡುತ್ತಿಲ್ಲ. ಪ್ರತಿಪಕ್ಷಗಳು ಪಟ್ಟಭದ್ರ ಹಿತಾಸಕ್ತಿ ಹೊಂದಿವೆ ಎಂದು ಅವರು ಟೀಕಿಸಿದ್ದಾರೆ.
ತಪ್ಪಿತಸ್ಥರನ್ನು ಬಂಧಿಸಲಾಗುವುದು. ಯಾರೇ ಆಗಲಿ, ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಅವಕಾಶವಿಲ್ಲ ಎಂದು ಯೋಗಿ ಹೇಳಿದ್ದಾರೆ.