ಲಖನೌ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲೇ ಬಿಜೆಪಿಯು ವಿಧಾನಸಭೆ ಚುನಾವಣೆ ಎದುರಿಸಲಿದೆ. ಮುಂದಿನ ಮುಖ್ಯಮಂತ್ರಿ ಯಾರೆಂಬುದು ಈಗಾಗಲೇ ಖಚಿತವಾಗಿದೆ ಎಂದು ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ದಿನೇಶ್ ಶರ್ಮಾ ಹೇಳಿದ್ದಾರೆ.
‘ಪಿಟಿಐ’ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಪ್ರತಿಪಕ್ಷಗಳು ರೈತರನ್ನು ಸರ್ಕಾರದ ವಿರುದ್ಧ ಎತ್ತಿಕಟ್ಟುತ್ತಿವೆ ಎಂದು ಆರೋಪಿಸಿದ್ದಾರೆ. ರೈತರ ನಿರಂತರ ಪ್ರತಿಭಟನೆಯು ರಾಜ್ಯದ 403 ವಿಧಾನಸಭಾ ಕ್ಷೇತ್ರಗಳ ಪೈಕಿ 100ಕ್ಕಿಂತಲೂ ಹೆಚ್ಚಿರುವ ಪಶ್ಚಿಮ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆ ಉಂಟುಮಾಡಲಿವೆ ಎಂಬ ಪ್ರತಿಪಕ್ಷಗಳ ವಾದವನ್ನು ಅವರು ಅಲ್ಲಗಳೆದಿದ್ದಾರೆ.
ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟುವುದು ರಾಜಕೀಯ ವಿಷಯವಲ್ಲ. ಅದು ಬಿಜೆಪಿಗೆ ನಂಬಿಕೆಯ ವಿಚಾರ ಎಂದು ಶರ್ಮಾ ಹೇಳಿದ್ದಾರೆ.
2022ರ ಚುನಾವಣೆ ಬಳಿಕ ಅಧಿಕಾರಕ್ಕೆ ಬಂದರೆ ಬಿಜೆಪಿಯು ಮುಖ್ಯಮಂತ್ರಿಯನ್ನಾಗಿ ಬೇರೆ ನಾಯಕನನ್ನು ಆಯ್ಕೆ ಮಾಡಲಿದೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಇದು ಮುಗಿದ ವಿಚಾರ. ಮರಳಿ ಅಧಿಕಾರಕ್ಕೆ ಬರುವ ಸಲುವಾಗಿ ಯೋಗಿ ಅವರ ನೇತೃತ್ವದಲ್ಲೇ ಚುನಾವಣೆ ಎದುರಿಸುವುದು ಎಂದು ಹೈಕಮಾಂಡ್ ಈಗಾಗಲೇ ನಿರ್ಧರಿಸಿ ಆಗಿದೆ’ ಎಂದು ಹೇಳಿದ್ದಾರೆ.
ಈ ಬಾರಿ ಬಿಜೆಪಿಯು ಬ್ರಾಹ್ಮಣ ಮತಗಳನ್ನು ಕಳೆದುಕೊಳ್ಳಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಇದು ಪ್ರತಿಸ್ಪರ್ಧಿ ಪಕ್ಷಗಳು ಹರಡುತ್ತಿರುವ ಸುಳ್ಳು ವಿಶ್ಲೇಷಣೆಯಷ್ಟೆ. ಬಿಜೆಪಿ ಸರ್ಕಾರವು ಜಾತಿ, ಪಂಥ ನೋಡದೆ ಸಮಾಜದ ಪ್ರತಿಯೊಂದು ವರ್ಗಗಳ ಪರವಾಗಿ ಕೆಲಸ ಮಾಡಿದೆ’ ಎಂದು ಪ್ರತಿಪಾದಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.