ಬೆಂಗಳೂರು: ಕೊರೊನಾ ಸೋಂಕು ಹರಡುವಿಕೆಯ ತೀವ್ರಗೊಂಡಿದ್ದರೂ ಎಸ್ಸೆಸ್ಸೆಲ್ಸಿ, ಪ್ರಥಮ, ದ್ವಿತೀಯ ಪಿಯುಸಿಗಳಿಗೆ ಶಿಕ್ಷಣ ಇಲಾಖೆ ಶಾಲೆ– ಕಾಲೇಜುಗಳಲ್ಲಿ ನೇರ ತರಗತಿ (ಆಫ್ಲೈನ್) ಮುಂದುವರಿಸಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ.
ಪದವಿಪೂರ್ವ ಕಾಲೇಜುಗಳ ನೇರ ತರಗತಿಗಳನ್ನು ಸ್ಥಗಿತಗೊಳಿಸಿ ಆನ್ಲೈನ್ ತರಗತಿಗೆ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಅವರಿಗೆ ಸೋಮವಾರ ಮನವಿ ಸಲ್ಲಿಸಲು ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ನಿರ್ಧರಿಸಿದೆ.
‘ರಾಜ್ಯದ ವಿವಿಧ ಭಾಗಗಳಲ್ಲಿ ಹತ್ತಾರು ಶಿಕ್ಷಕರು ಕೋವಿಡ್ಗೆ ಬಲಿಯಾಗಿದ್ದಾರೆ. ಈಗಾಗಲೇ ತಜ್ಞರ ಸಮಿತಿ ಕೂಡಾ ಶಾಲಾ ಕಾಲೇಜುಗಳಲ್ಲಿ ಆಫ್ಲೈನ್ ತರಗತಿಗಳನ್ನು ನಡೆಸದಂತೆ ಸಲಹೆ ನೀಡಿದೆ. ವಿವಿಧ ಇಲಾಖೆಗಳಲ್ಲಿ ಸಭೆಯನ್ನೇ ಮಾಡಬೇಡಿ ಎಂದು ಸರ್ಕಾರ ಆದೇಶ ಹೊರಡಿಸಿದೆ. ಇಂಥ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ತರಗತಿಗಳನ್ನು ಶಾಲೆಗಳಲ್ಲಿ ನಡೆಸುವುದು ಅಪಾಯಕಾರಿ’ ಎಂದೂ ಮನವಿ ಮಾಡಲು ಸಂಘ ತೀರ್ಮಾನಿಸಿದೆ.
‘ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದರೂ ರಾಜ್ಯ ಸರ್ಕಾರ ಇನ್ನೂ ಎಚ್ಚೆತ್ತುಕೊಂಡಿಲ್ಲ. ಮಕ್ಕಳು ಮತ್ತು ಶಿಕ್ಷಕರ ಜೀವದ ಜೊತೆಗೆ ಸರ್ಕಾರ ಚೆಲ್ಲಾಟವಾಡುತ್ತಿದೆ’ ಎಂದು ಪೋಷಕರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.