ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಲಜೀವನ್‌ ಮಿಷನ್‌ಗೆ ₹4,000 ಕೋಟಿ

ಹಾವೇರಿ, ಯಾದಗಿರಿ, ತುಮಕೂರು, ವಿಜಯಪುರ ಜಿಲ್ಲೆಗಳ ಜನ ವಸತಿ ಪ್ರದೇಶ
Last Updated 1 ಜುಲೈ 2022, 15:28 IST
ಅಕ್ಷರ ಗಾತ್ರ

ಬೆಂಗಳೂರು: ಜಲಜೀವನ್‌ ಮಿಷನ್‌ ಯೋಜನೆಯಡಿ ₹4,000 ಕೋಟಿ ವೆಚ್ಚದಲ್ಲಿ ಯಾದಗಿರಿ, ತುಮಕೂರು, ವಿಜಯಪುರ ಜಿಲ್ಲೆಗಳಲ್ಲಿ ಬಹುಗ್ರಾಮ ಕುಡಿಯುವ ನೀರು ಯೋಜನೆ ಜಾರಿಗೊಳಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಯಾದಗಿರಿ ಜಿಲ್ಲೆಯ ಎಲ್ಲ ಗ್ರಾಮೀಣ ಜನವಸತಿಗಳಿಗೆ ಹಾಗೂ 3 ನಗರ ಸ್ಥಳೀಯ ಸಂಸ್ಥೆಗಳಾದ ಕಕ್ಕೆರಾ, ಕೆಂಭಾವಿ ಮತ್ತು ಹುಣಸಗಿ ಪಟ್ಟಣಗಳಿಗೆ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗೆ ₹2,054 ಕೋಟಿ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು ಎಂದು ಅವರು ಹೇಳಿದರು.

* ತುಮಕೂರು ಜಿಲ್ಲೆ ಚಿಕ್ಕನಾಯಕಹಳ್ಳಿ ತಾಲ್ಲೂಕಿನ ಬೋರನಕಣಿವೆ ಅಣೆಕಟ್ಟಿನಿಂದ ಗಾಣದಾಳು, ಹೊಯ್ಸಳಕಟ್ಟೆ, ಕೆಂಕೆರೆ, ಬರಕನಾಳು, ದೊಡ್ಡ ಬಿದರೆ ಮತ್ತು ದಸೂಡಿ ಗ್ರಾಮ ಪಂಚಾಯಿತಿಗಳ 147 ಜನ ವಸತಿಗಳಿಗೆ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗೆ ₹115 ಕೋಟಿ ಅಂದಾಜು ವೆಚ್ಚದಲ್ಲಿ ಜಾರಿಗೆ ಒಪ್ಪಿಗೆ.

*ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ 398 ಜನವಸತಿಗಳಿಗೆ ಹೇಮಾವತಿ ನದಿಯಿಂದ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯನ್ನು ₹435 ಕೋಟಿ ಅಂದಾಜು ವೆಚ್ಚದಲ್ಲಿ ಜಾರಿಗೆ ಅನುಮೋದನೆ.

*ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಮತ್ತು ಸಿಂದಗಿ ಪಟ್ಟಣಗಳು ಹಾಗೂ ಇವೆರಡೂ ತಾಲ್ಲೂಕುಗಳಲ್ಲಿನ ಎಲ್ಲಾ ಗ್ರಾಮೀಣ ಜನವಸತಿಗಳು, ದೇವರ ಹಿಪ್ಪರಗಿ, ಆಲ್ಮೇಲ್‌, ತಾಳಿಕೋಟೆ ಮತ್ತು ನಲತವಾಡ್‌ಗಳಲ್ಲಿ ಬಹುಗ್ರಾಮ ಯೋಜನೆಯಡಿ ಕುಡಿಯುವ ನೀರು ಪೂರೈಕೆಗೆ ₹1,358 ಕೋಟಿ ಪರಿಷ್ಕೃತ ಅಂದಾಜಿಗೆ ಒಪ್ಪಿಗೆ.

* ಹಾವೇರಿ ಜಿಲ್ಲೆಯ 285 ಜನವಸತಿಗಳಿಗೆ ₹837 ಕೋಟಿ ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರು ಯೋಜನೆ ಜಾರಿಗೆ ಒಪ್ಪಿಗೆ.

*ಚಳ್ಳಕೆರೆ ತಾಲ್ಲೂಕಿನ ಮೈಲನಹಳ್ಳಿ ಗ್ರಾಮದ ಬಳಿ ವೇದಾವತಿ ನದಿಗೆ ಅಡ್ಡಲಾಗಿ ₹19.90 ಕೋಟಿ ವೆಚ್ಚದಲ್ಲಿ ಬ್ರಿಡ್ಜ್‌ ಕಂ ಬ್ಯಾರೇಜ್‌ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ.

* ಮಂಗಳೂರಿನ ಉಳ್ಳಾಲ ನಗರಸಭಾ ವ್ಯಾಪ್ತಿ ಕೋಟೆಕಾರ್‌ ಪಟ್ಟಣ ಪಂಚಾಯಿತಿ, ಸೋಮೇಶ್ವರ ಪುರಸಭೆ ವ್ಯಾಪ್ತಿಯ 24 ಗ್ರಾಮಗಳ ಕುಡಿಯುವ ನೀರು ಸರಬರಾಜು ಯೋಜನೆಯ ₹249.98 ಕೋಟಿ ಪರಿಷ್ಕೃತ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ.

* ಶಿರಸಿ ತಾಲ್ಲೂಕಿನ ಖಾನಾಪುರ, ತಾಳಗುಪ್ಪ ರಸ್ತೆಯ ರಾಜ್ಯ ಹೆದ್ದಾರಿ 93 ರ ಐದು ರಸ್ತೆ, ವೃತ್ತಗಳ ಸುಧಾರಣೆಗೆ ₹14.72 ಕೋಟಿ ವೆಚ್ಚದಲ್ಲಿ ಭೂಸ್ವಾದೀನಪಡಿಸಿಕೊಳ್ಳಲು ಅನುದಾನ ಬಿಡುಗಡೆಗೆ ಆಡಳಿತಾತ್ಮಕ ಅನುಮೋದನೆ ಒಪ್ಪಿಗೆ.

*ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ಈ ತಿಂಗಳು (ಜುಲೈ) ನಡೆಸುವುದಿಲ್ಲ, ಆಗಸ್ಟ್‌ನಲ್ಲಿ ನಡೆಸಲು ತೀರ್ಮಾನಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT