ಬೆಂಗಳೂರು: ಕೋವಿಡ್ ದೃಢ ಪ್ರಮಾಣವನ್ನು ಶೇ 5ಕ್ಕಿಂತ ಕಡಿಮೆಗೊಳಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೋಂಕು ತೀವ್ರವಾಗಿರುವ ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಮೈಸೂರು, ಮಂಡ್ಯ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದರು.
ಈ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಗುರುವಾರ ವಿಡಿಯೊ ಸಂವಾದ ನಡೆಸಿದ ಮುಖ್ಯಮಂತ್ರಿ, ಸೋಂಕು ನಿಯಂತ್ರಣ ಕುರಿತು ಚರ್ಚಿಸಿದರು. ರಾಜ್ಯದ ಒಟ್ಟು ಪ್ರಕರಣಗಳಲ್ಲಿ 65 ಸಾವಿರ ಸಕ್ರಿಯ ಪ್ರಕರಣಗಳು ಈ ಎಂಟು ಜಿಲ್ಲೆಗಳಲ್ಲಿವೆ.
ಕೋವಿಡ್ ಎರಡನೇ ಅಲೆ ತೀವ್ರಗೊಂಡಿರುವ ಕಾರಣ ರಾಜ್ಯ ಸರ್ಕಾರ ಕೈಗೊಂಡಿರುವ ಕಠಿಣ ನಿರ್ಬಂಧಗಳಿಂದಾಗಿ ಸೋಂಕಿನ ತೀವ್ರತೆ ಇಳಿಮುಖವಾಗುತ್ತಿದೆ. ಆದರೆ, ಮೈಸೂರು, ಹಾಸನ, ತುಮಕೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಮಂಡ್ಯ, ಬೆಳಗಾವಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ಕರಣಗಳ ಸಂಖ್ಯೆ ಇಳಿಕೆಯಾಗುತ್ತಿಲ್ಲ. ಅಲ್ಲದೆ, ಮೈಸೂರು ಹೊರತುಪಡಿಸಿ ಇತರ ಜಿಲ್ಲೆಗಳಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಹೆಚ್ಚಾಗಿರುವ ಬಗ್ಗೆ ಮುಖ್ಯಮಂತ್ರಿ ಕಳವಳ ವ್ಯಕ್ತಪಡಿಸಿದರು.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಜೂನ್ ಮೊದಲ ವಾರದಲ್ಲಿ ಕೋವಿಡ್ ದೃಢ ಪ್ರಮಾಣ ಅತಿ ಹೆಚ್ಚು ಅಂದರೆ, ಸರಾಸರಿ ಶೇ 25.17 ದಾಖಲಾಗಿದೆ. ಮೈಸೂರಿನಲ್ಲಿಯೂ ಶೇ 22ರಷ್ಟಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರತಿ ಸೋಂಕಿತರಿಗೆ ಸರಾಸರಿ ಕೇವಲ ಶೇ 6.1 ಸಂಪರ್ಕಿತರನ್ನು ಪತ್ತೆ ಹಚ್ಚಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗಳು ಇನ್ನಷ್ಟು ಕ್ರಮಗಳನ್ನು ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ಅವರು ತಿಳಿಸಿದರು.
‘ಕೋವಿಡ್ ನಿಯಂತ್ರಣ ಕ್ರಮಗಳು ಕಟ್ಟುನಿಟ್ಟಾಗಿ ಪಾಲನೆ ಆಗುತ್ತಿರುವುದನ್ನು ಖಾತರಿಪಡಿಸಬೇಕು. ಜನರು ನಿಯಮ ಉಲ್ಲಂಘಿಸದಂತೆ ಕ್ರಮ ಕೈಗೊಳ್ಳಬೇಕು. ಮೈಕ್ರೋ ಕಂಟೇನ್ಮೆಂಟ್ ವಲಯಗಳಲ್ಲಿ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಪಾಲನೆಗೆ ಒತ್ತು ನೀಡಬೇಕು. ಕೋವಿಡ್ ಪ್ರಕರಣಗಳ ಪ್ರಮಾಣ ತೀವ್ರಗತಿಯಲ್ಲಿ ಇಳಿಕೆಯಾಗುವಂತೆ ಮಾಡಿ ದೃಢ ಪ್ರಮಾಣ ಶೇ 5ರ ಒಳಗಿರುವಂತೆ ನೋಡಿಕೊಳ್ಳಬೇಕು’ ಎಂದು ಮುಖ್ಯಮಂತ್ರಿ ಸಲಹೆ ನೀಡಿದರು.
‘ಬೆಳಗಾವಿ, ಹಾಸನ ಮತ್ತಿತರ ಜಿಲ್ಲೆಗಳಲ್ಲಿ ರ್ಯಾಪಿಡ್ ಆಂಟಿಜೆನ್ ಪರೀಕ್ಷೆ ಹೆಚ್ಚಿಸಲಾಗುತ್ತಿದ್ದು, ಸರ್ಕಾರದ ಮಾರ್ಗಸೂಚಿಯಂತೆ ಶೇ 30ರಷ್ಟು ನಡೆಸಬೇಕು. ಉಳಿದ ಶೇ 70 ರಷ್ಟು ಆರ್ಟಿಪಿಸಿಆರ್ ಪರೀಕ್ಷೆ ನಡೆಸಬೇಕು. ಸೋಂಕು ಲಕ್ಷಣ ಇರುವವರಿಗೆ ಮಾತ್ರ ರ್ಯಾಪಿಡ್ ಆಂಟಿಜೆನ್ ಪರೀಕ್ಷೆ ಮಾಡಬೇಕು’ ಎಂದು ಮುಖ್ಯಮಂತ್ರಿ ಸಲಹೆ ನೀಡಿದರು.
‘ಆರ್ಟಿಪಿಸಿಆರ್ ಪರೀಕ್ಷಾ ವರದಿ 24 ಗಂಟೆಗಳ ಒಳಗೆ ನೀಡಬೇಕು, ಸೋಂಕಿತರ ಆರೋಗ್ಯ ಸ್ಥಿತಿಗೆ ಅನುಗುಣವಾಗಿ ವರ್ಗೀಕರಣ ಮಾಡುವ ಪ್ರಕ್ರಿಯೆ ತ್ವರಿತವಾಗಿ ನಡೆಸಬೇಕು. ಮೈಸೂರು ಹೊರತುಪಡಿಸಿ ಇತರ ಜಿಲ್ಲೆಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ಸೋಂಕು ತೀವ್ರವಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಸೋಂಕಿತರನ್ನು ಕೋವಿಡ್ ಆರೈಕೆ ಕೇಂದ್ರಗಳಿಗೆ ದಾಖಲಿಸಬೇಕು. ಸಂಪರ್ಕಿತರ ಪತ್ತೆ ಕಾರ್ಯ ಹೆಚ್ಚಿಸಬೇಕು. ಎಲ್ಲ ಜಿಲ್ಲೆಗಳಲ್ಲಿ, ವಿಶೇಷವಾಗಿ ಬೆಳಗಾವಿ ಜಿಲ್ಲೆಯಲ್ಲಿ ಲಸಿಕೆ ಅಭಿಯಾನ ತೀವ್ರಗೊಳಿಸಬೇಕು’ ಎಂದೂ ಅವರು ಸಲಹೆ ನೀಡಿದರು.
ಕೆಲವು ಚಟುವಟಿಕೆ ಹೊರತುಪಡಿಸಿ, ನಿರ್ಬಂಧಗಳನ್ನು ಮುಂದುವರೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಮನವಿ ಮಾಡಿದರು. ಈ ಬಗ್ಗೆ ಸಚಿವರ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.