ಬೆಂಗಳೂರು: ‘ರಾಜ್ಯದಲ್ಲಿ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. 2018ರ ಜನವರಿಯಿಂದ 2021ರ ಜುಲೈವರೆಗೆ 1,759 ಅತ್ಯಾಚಾರ ಪ್ರಕರಣಗಳು ನಡೆದಿವೆ. ಹೀಗಿದ್ದರೂಮಹಿಳಾ ಆಯೋಗ ಕಣ್ಣುಮುಚ್ಚಿ ಕುಳಿತಿದೆ’ ಎಂದು ಆಮ್ ಆದ್ಮಿ ಪಕ್ಷದಮಹಿಳಾ ಘಟಕದ ಅಧ್ಯಕ್ಷೆ ಕುಶಲಾ ಸ್ವಾಮಿ ಟೀಕಿಸಿದರು.
ಮಹಿಳಾ ಆಯೋಗ ನಿಷ್ಕ್ರಿಯವಾಗಿದೆ ಎಂದು ಆರೋಪಿಸಿಪಕ್ಷದ ವತಿಯಿಂದ ಆಯೋಗದ ಕಚೇರಿಗೆ ಬೀಗ ಹಾಕಿ ಮಂಗಳವಾರ ಪ್ರತಿಭಟಿಸಲಾಯಿತು. ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಅವರನ್ನು ವಜಾಗೊಳಿಸಬೇಕೆಂದು ಪ್ರತಿಭಟನಕಾರರು ಒತ್ತಾಯಿಸಿದರು.
‘ರಾಜ್ಯದಲ್ಲಿ ತಿಂಗಳಿಗೆ ಸರಾಸರಿ 42 ಅತ್ಯಾಚಾರ ನಡೆಯುತ್ತಿವೆ. ಈ ವರ್ಷದ ಮೊದಲ ಏಳು ತಿಂಗಳಿನಲ್ಲಿ 307 ಮಂದಿಯ ಮೇಲೆ ಅತ್ಯಾಚಾರ ನಡೆಸಲಾಗಿದೆ. 1,300 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದರೂ 6 ಮಂದಿಗಷ್ಟೇ ಶಿಕ್ಷೆಯಾಗಿದೆ. 178 ಮಂದಿ ವರದಕ್ಷಿಣೆ ಕಿರುಕುಳಕ್ಕೆ ಬಲಿಯಾಗಿದ್ದಾರೆ. ಮಾನಸಿಕ ಕಿರುಕುಳ ಹಾಗೂ ಬೆದರಿಕೆಗೆ ಹೆದರಿ 263 ಜನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 6 ಜನರ ಮೇಲೆ ಆ್ಯಸಿಡ್ ದಾಳಿ ನಡೆದಿದೆ. ಅಶ್ಲೀಲ ವಿಡಿಯೊ ಚಿತ್ರೀಕರಣಕ್ಕೆ 55 ಮಂದಿಯನ್ನು ಬಳಸಿಕೊಳ್ಳಲಾಗಿದೆ. ಈ ಪೈಕಿ ಮಹಿಳಾ ಆಯೋಗದ ಅಧ್ಯಕ್ಷರು ಎಷ್ಟು ಸಂತ್ರಸ್ತರನ್ನು ಭೇಟಿಯಾಗಿದ್ದಾರೆ’ ಎಂದು ಪ್ರಶ್ನಿಸಿದರು.
ಉಷಾ ಮೋಹನ್, ‘ಪ್ರಮೀಳಾ ನಾಯ್ಡು ಆಯೋಗದ ಅಧ್ಯಕ್ಷರೊ ಅಥವಾ ಬಿಜೆಪಿಯ ಏಜೆಂಟರೊ ಎಂಬ ಅನುಮಾನ ಕಾಡುತ್ತಿದೆ. ಮಹಿಳಾ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿದರೆ, ಪ್ರಕರಣಗಳು ಜನರ ಗಮನಕ್ಕೆ ಬಂದು ಸರ್ಕಾರದ ಮಾನ ಬೀದಿ ಪಾಲಾಗುತ್ತದೆ ಎಂಬ ಕಾರಣಕ್ಕೆ ಅವರು ನಿಷ್ಕ್ರಿಯರಾಗಿದ್ದಾರೆ’ ಎಂದು ದೂರಿದರು.
ಎಎಪಿಯ ರಾಜ್ಯ ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ, ‘ರಮೇಶ್ ಜಾರಕಿಹೊಳಿ ಪ್ರಕರಣದಲ್ಲಿ ಸರ್ಕಾರವು ಸಂತ್ರಸ್ತ ಯುವತಿಯ ಬದಲು ಆರೋಪಿಯ ಬೆನ್ನಿಗೆ ನಿಂತಿರುವುದು ವಿಪರ್ಯಾಸ’ ಎಂದು ತಿಳಿಸಿದರು.
ಪುಷ್ಪಾ ಕೇಶವ್, ರಾಜಶೇಖರ್ ದೊಡ್ಡಣ್ಣ, ಯೋಗಿತಾ ರೆಡ್ಡಿ, ಪ್ರಶಾಂತಿ, ಅಶೋಕ್ ಮೃತ್ಯುಂಜಯ, ಶಾಶಾವಲಿ, ಫಿರೋಜ್ ಖಾನ್ ಇದ್ದರು.