ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ‍್ರಾಮಾಣಿಕರಿಗೆ ಮಾತ್ರ ಟಿಕೆಟ್‌: ಎಎಪಿ

ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ದೆಹಲಿ ಶಾಸಕ ದಿಲೀಪ್‌ ಪಾಂಡೆ
Last Updated 25 ಜನವರಿ 2023, 14:24 IST
ಅಕ್ಷರ ಗಾತ್ರ

ಬೆಂಗಳೂರು: ‘ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಆಮ್‌ ಆದ್ಮಿ ಪಾರ್ಟಿ ಪ್ರಾಮಾಣಿಕ ವ್ಯಕ್ತಿಗಳಿಗೆ ಟಿಕೆಟ್‌ ನೀಡಲಿದೆ’ ಎಂದು ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ ಹಾಗೂ ದೆಹಲಿ ಶಾಸಕ ದಿಲೀಪ್‌ ಪಾಂಡೆ ತಿಳಿಸಿದರು.

ನಗರದಲ್ಲಿ ಬುಧವಾರ ನಡೆದ ಪಕ್ಷದ ರಾಜ್ಯ ಮತ್ತು ಜಿಲ್ಲೆಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ‘ಎಲ್ಲ 224 ಕ್ಷೇತ್ರಗಳಲ್ಲೂ ಸ್ಪರ್ಧಿಸಲು ಸಾಮಾಜಿಕ ಕಾರ್ಯಕರ್ತರು, ವಿವಿಧ ಕ್ಷೇತ್ರಗಳ ಸಾಧಕರು ಹಾಗೂ ಸಾರ್ವಜನಿಕರೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ಅನೇಕ ನಾಯಕರು ಆಸಕ್ತಿ ತೋರುತ್ತಿದ್ದಾರೆ. ಎಲ್ಲ ಆಕಾಂಕ್ಷಿಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಟಿಕೆಟ್‌ ನೀಡಲಾಗುವುದು’ ಎಂದರು.

‘ಉಳಿದ ಪಕ್ಷಗಳಿಂದ ಭ್ರಷ್ಟರು, ಕ್ರಿಮಿನಲ್‌ ಹಿನ್ನೆಲೆಯವರು, ಸುಳ್ಳು ಹೇಳುವವರು ಸ್ಪರ್ಧಿಸಿದರೆ, ಆಮ್‌ ಆದ್ಮಿ ಪಾರ್ಟಿಯಿಂದ ಪ್ರಾಮಾಣಿಕ ವ್ಯಕ್ತಿಗಳು ಚುನಾವಣಾ ಕಣಕ್ಕೆ ಧುಮುಕಲಿದ್ದಾರೆ. ಕರ್ನಾಟಕದಲ್ಲಿ ಭ್ರಷ್ಟ ಬಿಜೆಪಿ ಸರ್ಕಾರದ ಆಡಳಿತವನ್ನು ಅಂತ್ಯಗೊಳಿಸಿ, ಆಮ್‌ ಆದ್ಮಿ ಪಾರ್ಟಿಯ ಪಾರದರ್ಶಕ ಹಾಗೂ ಪ್ರಾಮಾಣಿಕ ಆಡಳಿತವನ್ನು ತರಲಾಗುವುದು’ ಎಂದು ಹೇಳಿದರು.

ರಾಜ್ಯ ಘಟಕದ ಅಧ್ಯಕ್ಷ ಪೃಥ್ವಿ ರೆಡ್ಡಿ ಮಾತನಾಡಿ, ‘ಕಳೆದ ಹತ್ತು ವರ್ಷಗಳಲ್ಲಿ ಆಡಳಿತ ನಡೆಸಿದ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಸರ್ಕಾರಿ ಶಾಲೆಗಳು ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಸುಧಾರಣೆ ತರುವ ಪ್ರಯತ್ನವನ್ನೇ ಮಾಡಿಲ್ಲ. ಕೇವಲ ದುಡ್ಡು ಮಾಡುವ ಉದ್ದೇಶದಿಂದ ಅಧಿಕಾರಕ್ಕೆ ಬರುವ ಈ ಪಕ್ಷಗಳಿಗೆ ಶಿಕ್ಷಣ ಹಾಗೂ ಆರೋಗ್ಯದ ಮಹತ್ವವೇ ಗೊತ್ತಿಲ್ಲ. ಇದೇ ಅವಧಿಯಲ್ಲಿ ದೆಹಲಿಯಲ್ಲಿ ಆಡಳಿತ ನಡೆಸಿದ ಆಮ್‌ ಆದ್ಮಿ ಪಾರ್ಟಿಯು ವಿಶ್ವದರ್ಜೆಯ ಸೌಲಭ್ಯಗಳನ್ನು ಶಿಕ್ಷಣ ಹಾಗೂ ಆರೋಗ್ಯ ವಲಯದಲ್ಲಿ ಅಳವಡಿಸಿಕೊಂಡಿದೆ. ದೆಹಲಿಯಲ್ಲಿ ಸಾಧ್ಯವಾಗಿದ್ದು ಇಲ್ಲಿ ಏಕೆ ಸಾಧ್ಯವಾಗಿಲ್ಲ ಎನ್ನುವುದನ್ನು ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳನ್ನು ಜನತೆ ಪ್ರಶ್ನಿಸಬೇಕಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT