ಬೆಂಗಳೂರು: ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆ ರಚನೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಕಳೆದ ಸಂಪುಟ ಸಭೆಯಲ್ಲಿ ಹೊಸ ಜಿಲ್ಲೆ ರಚನೆಗೆ ತಾತ್ವಿಕ ಒಪ್ಪಿಗೆಯನ್ನು ನೀಡಲಾಗಿತ್ತು.
ವಿಜಯನಗರಕ್ಕೆ ಹೊಸಪೇಟೆ ಜಿಲ್ಲಾ ಕೇಂದ್ರವಾಗಿರುತ್ತದೆ. ಹೊಸಪೇಟೆ, ಹರಪನಹಳ್ಳಿ, ಹೂವಿನಹಡಗಲಿ, ಕೂಡ್ಲಿಗಿ, ಕೊಟ್ಟೂರು, ಹಗರಿಬೊಮ್ಮನಹಳ್ಳಿ ತಾಲ್ಲೂಕುಗಳನ್ನು ಹೊಸ ಜಿಲ್ಲೆಗೆ ಸೇರಿಸಲಾಗುವುದು ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 11 ತಾಲ್ಲೂಕುಗಳಿದ್ದು 5 ತಾಲ್ಲೂಕುಗಳು ಮಾತ್ರ ಬಳ್ಳಾರಿ ಜಿಲ್ಲೆಗೆ ಉಳಿಯಲಿವೆ. ಆರು ತಾಲ್ಲೂಕುಗಳನ್ನು ಹೊಸ ಜಿಲ್ಲೆಗೆ ಸೇರಿಸುವ ಸಂಬಂಧ ಅಧಿಸೂಚನೆ ಹೊರಡಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಲಾಗುವುದು. ಆ ಬಳಿಕ ಅಂತಿಮ ಅಧಿಸೂಚನೆ ಹೊರಡಿಸಲಾಗುವುದು ಎಂದು ಅವರು ಹೇಳಿದರು.