ಬೆಂಗಳೂರು: ‘ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿ ಚುನಾವಣೆ ಎದುರಿಸಿದರೆ ಕಾಂಗ್ರೆಸ್ 130ರಿಂದ 150 ಸೀಟುಗಳನ್ನು ಗೆಲ್ಲುವುದು ಖಚಿತ. ಹೀಗಾಗಿ, ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಸಿದ್ದರಾಮಯ್ಯ ಎಂದು ಘೋಷಿಸುವಂತೆ ಅವರ ಪರವಿರುವ ಕಾಂಗ್ರೆಸ್ ನಾಯಕರೆಲ್ಲ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಒತ್ತಡ ಹೇರುತ್ತೇವೆ’ ಎಂದು ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಹೇಳಿದರು.
‘ಮುಂದಿನ ಮುಖ್ಯಮಂತ್ರಿ ಯಾರು ಆಗಲಿದ್ದಾರೆ ಎಂದು ಬಿಂಬಿಸುತ್ತ ಯಾರೂ ಗೊಂದಲ ಸೃಷ್ಟಿಬೇಡಿ’ ಎಂದು ಪಕ್ಷದ ಹೈಕಮಾಂಡ್ ಎಚ್ಚರಿಕೆ ನೀಡಿದ ಬಳಿಕವೂ ಧ್ವನಿ ಎತ್ತಿದ ಅಖಂಡ ಶ್ರೀನಿವಾಸ್ ಮೂರ್ತಿ, ‘2013ರಿಂದ 2018ರವರೆಗೆ ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿ ಆಗಿದ್ದವರು. ಇದೀಗ ಜನರು ಕೂಡ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಆಗಬೇಕು ಎನ್ನುತ್ತಿದ್ದಾರೆ. ನನ್ನ ಅಭಿಪ್ರಾಯ ಕೂಡ ಅದೇ’ ಎಂದರು.
ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ಸಿದ್ದರಾಮಯ್ಯ ಮುಖ್ಯಮಂತ್ರಿಯಾದರೆ ರಾಜ್ಯಕ್ಕೆ ಒಳ್ಳೆಯದಾಗುತ್ತದೆ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಪಕ್ಷದ ನಾಯಕರು. ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು’ ಎಂದರು.
‘ಬೆಂಕಿ ಹಚ್ಚಿ ನನ್ನ ಮನೆಯನ್ನು ಸುಟ್ಟು ಹಾಕಿದ ಪ್ರಕರಣದ ಬಗ್ಗೆ ಪಕ್ಷದ ಉಸ್ತುವಾರಿಯನ್ನು ಭೇಟಿ ಮಾಡಿ ವಿವರಿಸಿದ್ದೇನೆ. ಮಾಜಿ ಮೇಯರ್ ಸಂಪತ್ ರಾಜ್ ವಿರುದ್ಧ ದೂರು ಕೊಟ್ಟಿದ್ದೇನೆ. ನನಗೆ ಆಗಿರುವ ಅನ್ಯಾಯಕ್ಕೆ ನ್ಯಾಯ ಕೇಳಿದ್ದೇವೆ. ನಮ್ಮ ವಿರೋಧಿಗಳನ್ನು ಡಿ.ಕೆ. ಶಿವವಕುಮಾರ್ ಜೊತೆ ಸೇರಿಸಿಕೊಂಡು ಓಡಾಡುತ್ತಿದ್ದಾರೆ. ಸಿದ್ದರಾಮಯ್ಯ, ಜಮೀರ್ ನನ್ನ ಜೊತೆಗಿದ್ದಾರೆ’ ಎಂದು ಸ್ಪಷ್ಟಪಡಿಸಿದರು.
‘ಸಂಪತ್ ರಾಜ್ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಕೆಪಿಸಿಸಿ ಅಧ್ಯಕ್ಷರಿಗೆ ಸಾಕಷ್ಟು ಮನವಿ ಮಾಡಿದ್ದೇನೆ. ಅಧ್ಯಕ್ಷರು ಕ್ರಮ ತೆಗೆದುಕೊಂಡಿಲ್ಲ. ಒಬ್ಬ ಶಾಸಕನಾಗಿ ನಾನು ಬೀದಿಗೆ ಬಂದಿದ್ದೇನೆ’ ಎಂದ ಅವರು, ‘ಮುಂದಿನ ಚುನಾವಣೆಯಲ್ಲಿ ನನಗೆ ಟಿಕೆಟ್ ಕೊಡುವುದು ಬಿಡುವುದು ಹೈಕಮಾಂಡ್ಗೆ ಬಿಟ್ಟದ್ದು. ನನಗೆ ಟಿಕೆಟ್ ಕೊಡುವ ನಿರೀಕ್ಷೆಯಿದೆ. ಪ್ರಸನ್ನ ಕುಮಾರ್ ಕಾಂಗ್ರೆಸ್ ಸೇರ್ಪಡೆಯಾದರೂ ನನಗೆ ವಂಚನೆ ಆಗುವುದಿಲ್ಲ ಎಂಬ ವಿಶ್ವಾಸವಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.