ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಪಾಲರ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ: ಅಪಾರ್ಥ ಸರಿಯಲ್ಲ– ಲಕ್ಷ್ಮಣ ಸವದಿ

Last Updated 21 ಏಪ್ರಿಲ್ 2021, 8:54 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ತೀವ್ರಗೊಂಡಿರುವುದರಿಂದ ರಾಜ್ಯಪಾಲರ ನೇತೃತ್ವದಲ್ಲಿ, ಮುಖ್ಯಮಂತ್ರಿಯವರ ಮಾರ್ಗದರ್ಶನದಲ್ಲಿ ಸರ್ವಪಕ್ಷಗಳ ಸಭೆ ಏರ್ಪಡಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ. ಈ ಬಗ್ಗೆ ಅಪಾರ್ಥ ಕಲ್ಪಿಸುವುದು ಸರಿಯಲ್ಲ’ ಎಂದು ಉಪ ಮುಖ್ಯಮಂತ್ರಿಯೂ ಆಗಿರುವ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅಭಿಪ್ರಾಯಪಟ್ಟಿದ್ದಾರೆ.

‘ಕೋವಿಡ್‍ನಂಥ ಸಾಂಕ್ರಾಮಿಕ ರೋಗಕ್ಕೆ ಅಂಕುಶ ಹಾಕಲು ಸಾಮೂಹಿಕವಾಗಿ, ಸಂಘಟಿತರಾಗಿ ಕೈಜೋಡಿಸುವುದು ಸಾರ್ವಜನಿಕರ ಹಿತದೃಷ್ಟಿಯಿಂದ ಸೂಕ್ತವಾಗಿದೆ’ ಎಂದು ಅವರು ತಿಳಿಸಿದ್ದಾರೆ.

ರಾಜ್ಯಪಾಲರ ನೇತೃತ್ವದಲ್ಲಿ ಸರ್ವಪಕ್ಷ ಸಭೆ ಏರ್ಪಡಿಸಿದ ಬಗ್ಗೆ ವಿರೋಧ ಪಕ್ಷಗಳ ನಾಯಕರು ಟೀಕಿಸಿದ ಬಗ್ಗೆ ಪ್ರತಿಕ್ರಿಯಿಸಿದ ಸವದಿ, ‘ನಾಡಿನ ಹಿತದೃಷ್ಟಿಯಿಂದ ಸೂಕ್ತ ಮಾರ್ಗದರ್ಶನ ನೀಡುವ ಪರಮೋಚ್ಛ ಅಧಿಕಾರ ರಾಜ್ಯಪಾಲರಿಗಿದೆ. ರಾಜ್ಯಪಾಲ ವಜುಭಾಯಿ ವಾಲಾ ಹಿರಿಯ ಮುತ್ಸದ್ಧಿ. ಅವರಂಥವರ ಮಾರ್ಗದರ್ಶನ ಪಡೆಯುವುದರಿಂದ ಪ್ರಸ್ತುತ ಎದುರಾಗಿರುವ ಸಂಕಷ್ಟಗಳನ್ನು ನಿಭಾಯಿಸುವುದು ಸುಲಭವಾಗುತ್ತದೆ’ ಎಂದಿದ್ದಾರೆ.

‘ಕೋವಿಡ್ ನಿಯಂತ್ರಿಸುವ ಕೇಂದ್ರ ಮತ್ತು ರಾಜ್ಯಗಳ ಪ್ರಯತ್ನದ ನಡುವೆ ಸೂಕ್ತ ಕೊಂಡಿಯಂತೆ ರಾಜ್ಯಪಾಲರು ಕರ್ತವ್ಯ ನಿರ್ವಹಿಸುವುದರಲ್ಲಿ ಯಾವುದೇ ಲೋಪವಿಲ್ಲ. ಇದರಲ್ಲೂ ತಪ್ಪು ಹುಡುಕುವುದನ್ನು ಬಿಟ್ಟು, ಸಮಸ್ಯೆ ಪರಿಹರಿಸಿ ಸಾರ್ವಜನಿಕರಿಗೆ ನೆಮ್ಮದಿ ನೀಡುವಂಥ ಸಕಾರಾತ್ಮಕ ಸಲಹೆ, ಸೂಚನೆಗಳನ್ನು ವಿರೋಧ ಪಕ್ಷಗಳು ನೀಡಿದರೆ ಒಳ್ಳೆಯದು’ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.

‘ಕೋವಿಡ್ ಮಿತಿಮೀರುತ್ತಿರುವುದರಿಂದ ಸೋಂಕಿತರಿಗೆ ಚಿಕಿತ್ಸೆ ಒದಗಿಸಲು ಮತ್ತು ಸಮುದಾಯಕ್ಕೆ ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳುತ್ತಿವೆ. ಕೆಲವು ಬಿಗಿ ಕ್ರಮಗಳನ್ನು ಕೈಗೊಳ್ಳುವುದೂ ಅನಿವಾರ್ಯವಾಗಿದೆ. ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯದಲ್ಲಿ ಲಾಕ್‍ಡೌನ್‍ನಂಥ ಗಂಭೀರ ಕ್ರಮಗಳನ್ನು ಕೈಗೊಂಡು ಈ ಪಿಡುಗನ್ನು ಮಟ್ಟಹಾಕಲು ಯತ್ನಿಸಲಾಗುತ್ತಿದೆ. ಸಾರ್ವಜನಿಕರಿಗೆ ಕೊಂಚ ಅಡಚಣೆಗಳಾದರೂ ಆರೋಗ್ಯದ ಹಿತದೃಷ್ಟಿಯಿಂದ ಎಲ್ಲರೂ ಸಹಕರಿಸಬೇಕು’ ಎಂದು ಅವರು ಮನವಿ ಮಾಡಿದ್ದಾರೆ.

‘ಮುಖ್ಯಮಂತ್ರಿಯ ನೇತೃತ್ವದಲ್ಲಿ ಎಲ್ಲ ಸಚಿವರ ಒಮ್ಮತ, ಸಹಮತಗಳಿಂದಲೇ ಸಮರ್ಪಕ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಕೋವಿಡ್ ನಿಯಂತ್ರಿಸಲು ಪರಿಣಾಮಕಾರಿಯಾಗಿ ಕ್ರಮ ಕೈಗೊಳ್ಳುವುದಕ್ಕೆ ಸರ್ಕಾರ ಸಿದ್ಧವಾಗಿದೆ. ಈ ವಿಷಯದಲ್ಲಿ ಮೊಸರಲ್ಲಿ ಕಲ್ಲು ಹುಡುಕುವ ಕೆಲಸವನ್ನು ಯಾರೂ ಮಾಡಬಾರದು. ಕೊರೊನಾ ವಿಚಾರದಲ್ಲಿ ಸಚಿವ ಸಂಪುಟದ ಯಾವುದೇ ಸಚಿವರೂ ನಿರ್ಲಕ್ಷ್ಯ ತೋರಿಸಿದ ಪ್ರಶ್ನೆಯೇ ಉದ್ಭವಿಸಿಲ್ಲ’ ಎಂದು ಸವದಿ ಸ್ಪಷ್ಟಪಡಿಸಿದ್ದಾರೆ.

ಸಾರಿಗೆ ಮಾರ್ಗಸೂಚಿ: ‘ಕೋವಿಡ್ ನಿಯಂತ್ರಣದ ಹೊಸ ಮಾರ್ಗಸೂಚಿಯಲ್ಲಿ ಸರ್ಕಾರಿ ಬಸ್ಸು ಮತ್ತು ಖಾಸಗಿ ಸಾರಿಗೆ ಸಂಚಾರಕ್ಕೆ ನಿಷೇಧ ವಿಧಿಸಿಲ್ಲ. ಆದರೆ, ಬಸ್ಸುಗಳಲ್ಲಿ ಅಂತರ ಕಾಪಾಡಿಕೊಳ್ಳುವ ಉದ್ದೇಶದಿಂದ ಶೇ 50ರಷ್ಟು ಪ್ರಯಾಣಿಕರನ್ನು ಕರೆದೊಯ್ಯಲು ಅನುಮತಿ ನೀಡಲಾಗಿದೆ. ಪ್ರಯಾಣಿಕರು ವಾಹನಗಳಲ್ಲಿ ಸಂಚರಿಸುವ ಸಮಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ. ಕೋವಿಡ್‍ನ ಗಂಭೀರ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಪ್ರಯಾಣಿಕರು ಸಹಕರಿಸಬೇಕು’ ಎಂದು ಸವದಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT